
ಉಳ್ಳಾಲ: ಕಾರೊಂದರಲ್ಲಿ ಬಂದ ಆರು ಮಂದಿ ಆಗಂತುಕರ ತಂಡ ಉಳ್ಳಾಲ ತಾಲೂಕು ಕೆ.ಸಿ.ರೋಡ್ ಎಂಬಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನಿಂದ 15 ಕೋಟಿ ರೂ.ಗೂ ಮಿಕ್ಕಿದ ಚಿನ್ನ ಹಾಗೂ ಐದು ಲಕ್ಷದಷ್ಟು ನಗದನ್ನು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ದರೋಡೆ ನಡೆಸಿ ಪರಾರಿಯಾದ ಘಟನೆ ಹಾಡಹಗಲೇ ನಡೆದಿದೆ.
ಸ್ಥಳಕ್ಕೆ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಭೇಟಿ ನೀಡಿ ಶೀಘ್ರವೇ ದರೋಡೆಕೋರರನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಿದ್ದಾರೆ.
ಬ್ಯಾಂಕಿನಲ್ಲಿದ್ದ ಮೂವರು ಮಹಿಳಾ ಸಿಬ್ಬಂದಿ ಹಾಗೂ ಓರ್ವ ಪುರುಷ ಸಿಬ್ಬಂದಿ ಮತ್ತೋರ್ವ ಸಿಸಿಟಿವಿ ಟೆಕ್ನೀಷಿಯನ್ ಅವರಿಗೆ ಬಂದೂಕು ಹಾಗೂ ತಲವಾರು ತೋರಿಸಿದ ಮಾಸ್ಕ್ ಧರಿಸಿದ್ದ ಐವರ ತಂಡ ಸುಮ್ಮನಿರುವಂತೆ ಬೆದರಿಸಿ, ಇಲ್ಲವಾದಲ್ಲಿ ಕೊಲ್ಲುವ ಬೆದರಿಕೆಯನ್ನು ಒಡ್ಡಿ ಲಾಕರ್ ನಲ್ಲಿದ್ದ 15 ಕೋಟಿ ರೂ. ಚಿನ್ನ ಹಾಗೂ 5 ಲಕ್ಷ ರೂ ನಷ್ಟು ನಗದು ದೋಚಿ ಗ್ರೇ ಬಣ್ಣದ ಫಿಯೇಟ್ ಕಾರಿನಲ್ಲಿ ಪರಾರಿಯಾಗಿದ್ದಾರೆ. ಸದಾ ಜನಜಂಗುಳಿಯಿಂದ ಕೂಡಿರುವ ಕೆ.ಸಿ ರೋಡ್ ಜಂಕ್ಷನ್ ಶುಕ್ರವಾರವಾದ ಹಿನ್ನೆಲೆಯಲ್ಲಿ ಹೆಚ್ಚು ಜನರಿರಲಿಲ್ಲ.
ಕೃತ್ಯ ಸಂದರ್ಭ ವಿದ್ಯಾರ್ಥಿಗಳು ಬ್ಯಾಂಕ್ ಕೆಳಗಿನ ಬೇಕರಿಯಲ್ಲಿದ್ದು, ಸಿಬ್ಬಂದಿ ಬೊಬ್ಬೆ ಕೇಳಿ ವಿದ್ಯಾರ್ಥಿಗಳು ಮೊದಲ ಮಹಡಿಯಲ್ಲಿರುವ ಬ್ಯಾಂಕಿನತ್ತ ದೌಡಾಯಿಸಿದ್ದರು. ದರೋಡೆಕೋರರು ಈ ವೇಳೆಯೂ ವಿದ್ಯಾರ್ಥಿಗಳು ವಾಪಾಸು ಹೋಗುವಂತೆ ಬೆದರಿಸಿದ್ದಾರೆ. ಪ್ರತ್ಯಕ್ಷದರ್ಶಿ ವಿದ್ಯಾರ್ಥಿಗಳಲ್ಲಿ ಆಗಂತುಕರು ಕನ್ನಡ ಮಾತನಾಡಿದ್ದರೆ, ಬ್ಯಾಂಕ್ ಸಿಬ್ಬಂದಿ ಜೊತೆ ಹಿಂದಿ ಭಾಷೆಯಲ್ಲಿ ಸಂಭಾಷಣೆ ನಡೆಸಿರುವುದಾಗಿ ಸಿಬ್ಬಂದಿ ಪೊಲೀಸ್ ತನಿಖೆ ವೇಳೆ ತಿಳಿಸಿದ್ದಾರೆ.
ಬ್ಯಾಂಕಿಗೆ ಸಿಸಿಟಿವಿ ದುರಸ್ತಿಗೆಂದು ತಂತ್ರಜ್ಞರೊಬ್ಬರು ಆಗಮಿಸಿದ್ದು, ಅದೇ ದಿನದಂದು ದರೋಡೆ ನಡೆದಿದೆ. ಸಿಸಿಟಿವಿ ತಂತ್ರಜ್ಞರ ಬೆರಳಿನಲ್ಲಿದ್ದ ಉಂಗುರವನ್ನು ಬಲಾತ್ಕಾರವಾಗಿ ದೋಚಿರುವ ದರೋಡೆಕೋರರು ಗೋಣಿ ಪೂರ್ತಿ ಚಿನ್ನ ಹಾಗೂ ನಗದಿನ ಜೊತೆಗೆ ಪರಾರಿಯಾಗಿದ್ದಾರೆ
ವಿಧಾನಸಭಾಧ್ಯಕ್ಷರ ಭೇಟಿ
ಕೃತ್ಯ ಸ್ಥಳಕ್ಕೆ ವಿಧಾನಸಭೆ ಅಧ್ಯಕ್ಷ ಯು.ಟಿ ಖಾದರ್ ಭೇಟಿ ನೀಡಿ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಅಲ್ಲದೆ ಎಸಿಪಿ ಅವರಲ್ಲಿ ತಕ್ಷಣವೇ ದರೋಡೆಕೋರರನ್ನು ಹಿಡಿಯುವಂತೆ ಸೂಚಿಸಿದ್ದಲ್ಲದೆ ತನಿಖೆಯ ಹಾದಿಯನ್ನು ತಿಳಿದು ಪಡೆದುಕೊಂಡರು.
ಘಟನಾ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಉಳ್ಳಾಲ ಪೊಲೀಸರ ತಂಡ ಭೇಟಿ ನೀಡಿದೆ.
