ತೊಕ್ಕೊಟ್ಟು: ಮೂಲಸೌಕರ್ಯವನ್ನು ಒದಗಿಸದೆ ಟೋಲ್ ಸಂಗ್ರಹಿಸುವ ನವಯುಗ್ ಕಂಪೆನಿ ವಿರುದ್ಧ ಪಕ್ಷಾತೀತವಾಗಿ ಹಲವು ಸಂಘಟನೆಗಳು ಸೇರಿಕೊಂಡು ಫೆ.11 ರಂದು ತೊಕ್ಕೊಟ್ಟುವಿನಿಂದ ತಲಪಾಡಿವರೆಗೆ ರಸ್ತೆ ತಡೆ ಮತ್ತು ಬಸ್ ಬಂದ್ ನಡೆಸಲಾಗುವುದು ಎಂದು ಮಂಗಳೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹೇಳಿದ್ದಾರೆ.
ಅವರು ತೊಕ್ಕೊಟ್ಟುವಿನಲ್ಲಿ ಇಂದು ನಡೆಸಿದ ಸುದ್ಧಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು.
ಗಡಿನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಸಿದ್ಧೀಖ್ ತಲಪಾಡಿ ಮಾತನಾಡಿ ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ತೊಕ್ಕೊಟ್ಟುವಿನಿಂದ ತಲಪಾಡಿವರೆಗೆ ಬಂದ್ ನಡೆಯಲಿದೆ. ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ನಡೆಸುವುದಿಲ್ಲ. ಅವರ ಇಚ್ಛೆಯನುಸಾರ ಬಂದ್ ನಡೆಸುವ ವಿಶ್ವಾಸವಿದೆ. ಬಸ್ಸು ಮಾಲೀಕರು ಬೆಂಬಲ ನೀಡಿರುವುದರಿಂದ ಖಾಸಗಿ ಬಸ್ಸುಗಳು ಸಂಪೂರ್ಣವಾಗಿ ಬಂದ ಆಗಲಿದೆ. ಆಂಬ್ಯುಲೆನ್ಸ್, ಪತ್ರಿಕಾ ವಾಹನ , ಹಾಲಿನ ವಾಹನ, ಔಷಧಿ ಅಂಗಡಿಗಳಿಗೆ ಬಂದ್ ವೇಳೆ ವಿನಾಯಿತಿ ಇದೆ ಎಂದರು.
ಈ ಸಂದರ್ಭ ಕಾಂಗ್ರೆಸ್ ಕ್ಷೇತ್ರ ಕಾರ್ಯದರ್ಶಿ ಅಬ್ದುಲ್ ರೆಹಮಾನ್ ಕೋಡಿಜಾಲ್, ಟೂರಿಸ್ಟ್ ವಾಹನ ಮತ್ತು ಮಾಲೀಕರ ಸಂಘದ ದಿನೇಶ್ ಕುಂಪಲ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮುಸ್ತಾಫ, ಗಣೇಶ್ ತಲಪಾಡಿ ಇತರರು ಇದ್ದರು.