ಉಳ್ಳಾಲ ನ್ಯೂಸ್ ನೆಟ್ ವರ್ಕ್
ಉಳ್ಳಾಲ: ಕಂದಕ ನಿವಾಸಿ ಅರಾಫತ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ ತಲಪಾಡಿ ಟೋಲ್ ಗೇಟ್ ಸಿಬ್ಬಂದಿಯನ್ನು ಕೂಡಲೇ ಪೊಲೀಸರು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ ತಿಳಿಸಿದ್ದಾರೆ.
ಶುಕ್ರವಾರ ಉಳ್ಳಾಲದ ಸರೋಜ್ ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು ಚಿಕಿತ್ಸೆ ಪಡೆಯುತ್ತಿರುವ ಅರಾಫತ್ ಜತೆಗೆ ಮಾತುಕತೆ ನಡೆಸಿ ಘಟನೆಯನ್ನು ಖಂಡಿಸಿದರು.
ಗೂಂಡಾಗಳಂತೆ ವರ್ತಿಸುತ್ತಿರುವ ಟೋಲ್ಗೇಟ್ ಸಿಬ್ಬಂದಿಯನ್ನು ಶೀಘ್ರವೇ ಪೊಲೀಸರು ಬಂಧಿಸಬೇಕಿದೆ. ಗೂಂಡಾ ಹಿನ್ನಲೆಯುಳ್ಳ ಸಿಬ್ಬಂದಿಯನ್ನು ಕಂಪೆನಿ ಶೀಘ್ರವೇ ಕೆಲಸದಿಂದ ವಜಾ ಮಾಡಬೇಕು. ಇಲ್ಲದಿದ್ದರೆ ಜಾತಿ, ಮತ, ರಾಜಕೀಯ ಮರೆತು ಉಗ್ರ ಹೋರಾಟ ಮಾಡುವುದು ಅನಿವಾರ್ಯವಾದೀತು ಎಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಉಳ್ಳಾಲ ನಗರಸಭೆ ಅದ್ಯಕ್ಷ ಹುಸೈನ್ ಕುಂಞ ಮೋನು, ಕಾಂಗ್ರೆಸ್ ವಕ್ತಾರ ಫಾರೂಕ್ ಉಳ್ಳಾಲ್, ಮಂಗಳೂರು ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಯು.ಬಿ.ಸಲೀಮ್, ತಲಪಾಡಿ ಹಿತರಕ್ಷಣಾ ಸಮಿತಿ ಉಪಾಧ್ಯಕ್ಷ ಖಾದರ್ ತಲಪಾಡಿ, ಅಬ್ಬಾಸ್ ಉಚ್ಚಿಲ್ , ಮಾಜಿ ತಾಲೂಕು ಪಂಚಾಯತ್ ಸದಸ್ಯ ಮಹಮ್ಮದ್ ಮುಸ್ತಾಫ, ಸಲಾಮ್ ಕೆಸಿರೋಡ್, ನಗರಸಭೆ ಸದಸ್ಯ ಯು.ಎ.ಇಸ್ಮಾಯಿಲ್ ಉಪಸ್ಥಿತರಿದ್ದರು.


