ಉಳ್ಳಾಲ ನ್ಯೂಸ್ ನೆಟ್ ವರ್ಕ್
ನರಿಂಗಾನ : ಕಿಂಡಿ ಅಣೆಕಟ್ಟುಗಳ ಮೂಲಕ ಅಂತರ್ಜಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಾಂತ ಸುಮಾರು 1000 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವ ಅಭಿಯಾನವನ್ನು ಜಿಲ್ಲಾ ಪಂಚಾಯತ್ ಹಾಕಿಕೊಂಡಿದ್ದು, ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿಯಡಿ 90 ಕೋಟಿ ರೂ.ವರೆಗೆ ಹಣಕಾಸು ಬಳಸುವ ಅವಕಾಶವಿದ್ದು ಇದರ ಸದುಪಯೋಗವನ್ನು ಪ್ರತೀ ಗ್ರಾಮ ಪಂಚಾಯತ್ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಹೇಳಿದ್ದಾರೆ.
ಕಳೆದ ತಿಂಗಳಿಂದ ಜಿಲ್ಲೆಯಾದ್ಯಂತ ಕಿಂಡಿ ಅಣೆಕಟ್ಟು ನಿರ್ಮಾಣ ಕಾರ್ಯ ಸ್ಥಳೀಯ ಸಂಪನ್ಮೂಲ ಬಳಸಿಕೊಂಡು ಸ್ಥಳೀಯರೇ ಕಿಂಡಿ ಅಣೆಕಟ್ಟು ನಿರ್ಮಾಣ ಕಾರ್ಯ ಮಾಡುತ್ತಿದ್ದು, ಈಗಾಗಲೇ 325 ಅಣೆಕಟ್ಟು ಕಾರ್ಯ ಮುಗಿದಿದ್ದು, ಮಳೆಗಾಲದ ಮೊದಲು 500 ಕಿಂಡಿ ಅಣೆಕಟ್ಟು ನಿರ್ಮಾಣದ ಗುರಿಯನ್ನು ಇಟ್ಟುಕೊಂಡಿದೆ. ಬಂಟ್ವಾಳ ತಾಲೂಕಿನಲ್ಲಿ ಒಟ್ಟು 112 ಕಿಂಡಿ ಅಣೆಕಟ್ಟಿನಲ್ಲಿ 91 ಕಾಮಗಾರಿ ಪೂರ್ಣಗೊಂಡಿದೆ. ಅದರಲ್ಲೂ ಕಿಂಡಿ ಆಣೆಕಟ್ಟು ನಿರ್ಮಾಣಕ್ಕೆ ಕುರ್ನಾಡು ಕ್ಷೇತ್ರದಲ್ಲಿ ಅತೀ ಹೆಚ್ಚು ಕಿಂಡಿ ಅಣೆಕಟ್ಟು ನಿರ್ಮಾಣವಾಗುತ್ತಿದ್ದು, ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿ ಅವರ ಶ್ರಮ ಮಹತ್ವದ್ದು ಎಂದರು.
ಮೋರ್ಲ ಬಂಡಸಾಲೆಯಲ್ಲಿ ಕಿಂಡಿ ಅಣೆಕಟ್ಟಿಗೆ ಚಾಲನೆ ನೀಡಿದ ಸಚಿವ ಯು.ಟಿ.ಖಾದರ್ ಮಾತನಾಡಿ ನೀರಾವರಿ ಯೋಜನೆಯನ್ನು ಸಮರ್ಪಕವಾಗಿ ಅಳವಡಿಸಿದರೆ ಜೀವನ ಕ್ರಮದಲ್ಲಿ ಸಮತೋಲನ ಸಾಧ್ಯವಿದ್ದು, ನರೇಗಾದ ಮೂಲಕ ನಡೆಯುವ ಕಾಮಗಾರಿಯ ಹಣ 15 ದಿನದೊಳಗೆ ಫಲಾನುಭವಿಗಳಿಗೆ ಸಿಗುವಂತಾದಾಗ ಜನರು ಇನ್ನಷ್ಟು ಉತ್ಸಾಹದಲ್ಲಿ ಕಾಮಗಾರಿಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಿದ್ದು. ಸರಕಾರದ ಯೋಜನೆಗಳಿಂದ ಜನಸಾಮಾನ್ಯರ ಮನೆಯಲ್ಲಿ ಅಭಿವೃದ್ಧಿಯಾದರೆ ಮಾತ್ರ ಯೋಜನೆ ಸಾಕಾರಗೊಂಡ ನೆಮ್ಮದಿ ಇರುತ್ತದೆ ಎಂದರು.
ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿ ಮಾತನಾಡಿ ಕುರ್ನಾಡು ಕ್ಷೇತ್ರದಲ್ಲಿ ಕಿಂಡಿ ಅಣೆಕಟ್ಟುಗಳ ನಿರ್ಮಾಣದ ಯಶಸ್ವಿಯಲ್ಲಿ ತಾಲೂಕು ಪಂಚಾಯತ್ ಸದಸ್ಯರು ಮತ್ತು ಗ್ರಾಮ ಪಂಚಾಯತ್ ಅದ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳ ಸಹಕಾರದಿಂದ ಸಾಧ್ಯವಾಗಿದ್ದು, ಇನ್ನಷ್ಟು ಕಿಂಡಿ ಅಣೆಕಟ್ಟುಗಳ ನಿರ್ಮಾಣದ ಗುರಿಯನ್ನು ಇಟ್ಟುಕೊಂಡಿದೆ ಎಂದರು.
ಕಾರ್ಯಕ್ರಮದಲ್ಲಿ ನರೇಗ ನೋಡೆಲ್ ಅಧಿಕಾರಿ ಸುಧಾಕರ್, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾ ಮಿರಾಂಡ, ಸದಸ್ಯರಾದ ಹೈದರ್ ಕೈರಂಗಳ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎನ್.ಎಸ್. ಕರೀಂ, ಬಾಳೆಪುಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೀಲಾವತಿ, ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ರಝಾಕ್ ಕುಕ್ಕಾಜೆ,ಮಂಜನಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಹಮ್ಮದ್ ಅಸೈ, ಜನಶಿಕ್ಷಣ ಟ್ರಸ್ಟ್ ನ ಮುಖ್ಯಸ್ಥರಾದ ಶೀನ ಶೆಟ್ಟಿ , ಕೃಷ್ಣ ಮೂಲ್ಯ, ಮುಖಂಡರಾದ ಪದ್ಮನಾಭ ನರಿಂಗಾನ, ನರಿಂಗಾನ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ನಳಿನಾಕ್ಷಿ, ನರೇಗಾದ ಅಭಿಯಂತರ ಗುರುಪ್ರಸಾದ್, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ನರಿಂಗಾನ ಗ್ರಾಮ ಪಂಚಾಯತ್ನ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ ಸ್ವಾಗತಿಸಿದರು. ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕಿ ದಯಾವತಿ ಕಾರ್ಯಕ್ರಮ ನಿರ್ವಹಿಸಿದರು. ಅಭಿವೃದ್ಧಿ ಅಧಿಕಾರಿ ನಳಿನಿ ಎ.ಕೆ. ವಂದಿಸಿದರು.
ಈ ಸಂದರ್ಭ ಮೋಂಟುಗೋಳಿ ಶಾಲೆಯ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಚಿವ ಖಾದರ್ ಸನ್ಮಾನಿಸಿದರು.