Site icon Ullalavani

ತೊಕ್ಕೊಟ್ಟುವಿನಲ್ಲಿ ಜನಸಂಪರ್ಕ ಸಭೆಯಲ್ಲಿ ಚೆಕ್ ವಿತರಣೆ

ಉಳ್ಳಾಲ ನ್ಯೂಸ್ ನೆಟ್ ವರ್ಕ್

ತೊಕ್ಕೊಟ್ಟು: ಮಂಗಳೂರು ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಶ್ರೀಘ್ರವೇ ಐದು ಕಡೆಗಳಲ್ಲಿ ಆಧಾರ್ ಕೇಂದ್ರಗಳನ್ನು ಆರಂಭಿಸಲಾಗುವುದು ಇದರಿಂದ ಪ್ರತಿಯೊಬ್ಬರು ಆಧಾರ್ ಕಾರ್ಡ್ ಹೊಂದುವ ಮೂಲಕ ಸರಕಾರಿ ಸೌಲಭ್ಯವನ್ನು ಸುಲಭವಾಗಿ ಪಡೆಯಬಹುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದರು.

ತೊಕ್ಕೊಟ್ಟು ಸಮೀಪದ ಖಾಸಗಿ ಸಭಾಂಗಣದಲ್ಲಿ ಗುರುವಾರ ನಡೆದ ತಾಲೂಕು ಮಟ್ಟದ ಜನ ಸಂಪರ್ಕ ಸಭೆಯಲ್ಲಿ ಅವರು ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದರು.

ಸರ್ಕಾರ ಎಲ್ಲಾ ವರ್ಗದ ಜನರಿಗೂ ವಿವಿಧ ಸವಲತ್ತುಗಳನ್ನು ಜಾರಿಗೆ ತಂದಿದ್ದು ಇದರ ಪ್ರಯೋಜನ ಪಡೆಯುವ ಮನೋಭಾವ ಎಲ್ಲರಲ್ಲಿ ಇರಬೇಕು. ಮಾಸಿಕ ಪೆನ್ಷನ್ ಸಹಿತ ಜನಸಾಮಾನ್ಯರ ದೂರು ಆಲಿಸುವ ನಿಟ್ಟಿನಲ್ಲಿ ತಾಲೂಕು ಕಚೇರಿಯಲ್ಲಿ ದೂರು ಕೇಂದ್ರ ಆರಂಭಿಸುವಂತೆ ತಹಸೀಲ್ದಾರ್‍ಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕುಟುಂಬ ಸಹಾಯಧನ ಯೋಜನೆಯಡಿ 186 ಫಲಾನುಭವಿಗಳಿಗೆ 37,60,000 ಹಾಗೂ ಅಂತ್ಯ ಸಂಸ್ಕಾರ ಸಹಾಯಧನವಾಗಿ 100 ಫಲಾನುಭವಿಗಳಿಗೆ 2,22,000 ಮೊತ್ತದ ಚೆಕ್ ವಿತರಿಸಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯೆ ರಶೀದಾ ಬಾನು, ತಾಲೂಕು ಪಂಚಾಯಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಕೊಳಂಗೆರೆ, ಸುರೇಖ ಚಂದ್ರಹಾಸ್, ಅಬ್ದುಲ್ ಜಬ್ಬಾರ್ ಬೋಳಿಯಾರ್, ಪದ್ಮಾವತಿ ಪುಜಾರಿ, ಶಶಿಪ್ರಭಾ ಶೆಟ್ಟಿ, ವಿಲ್ಮಾ ವಿಲ್ಫ್ರೆಡ್, ಉಳ್ಳಾಲ ನಗರಸಭಾಧ್ಯಕ್ಷ ಹುಸೈನ್ ಕುಂಞ ಮೋನು, ಉಪಾಧ್ಯಕ್ಷೆ ಚಿತ್ರಕಲಾ, ಸ್ಥಾಯಿ ಸಮಿತಿಯ ಅಧ್ಯಕ್ಷ ಉಸ್ಮಾನ್ ಕಲ್ಲಾಪು, ತಹಸೀಲ್ದಾರ್ ಮಹಾದೇವಯ್ಯ, ಪಾವೂರು ಗ್ರಾ.ಪಂ.ಅಧ್ಯಕ್ಷ ಮೊಹಮ್ಮದ್ ಫಿರೋಜ್, ಅಂಬ್ಲಮೊಗರು ಗ್ರಾ.ಪಂ. ಅಧ್ಯಕ್ಷ ಮೊಹಮ್ಮದ್ ರಫೀಕ್, ಹರೇಕಳ ಅಧ್ಯಕ್ಷೆ ಅನಿತಾ ಡಿಸೋಜ, ಬೆಳ್ಮ ಉಪಾಧ್ಯಕ್ಷ ಬಿ.ಎಂ.ಅಬ್ದುಲ್ ಸತ್ತಾರ್, ಬೋಳಿಯಾರ್ ಅಧ್ಯಕ್ಷ ಸತೀಶ್ ಆಚಾರ್ಯ, ಮಂಜನಾಡಿ ಅಧ್ಯಕ್ಷ ಮೊಹಮ್ಮದ್ ಅಸೈ, ಎಪಿಎಂಸಿ ಉಪಾಧ್ಯಕ್ಷೆ ಮುತ್ತು ಶೆಟ್ಟಿ, ಕೆಎಸ್‍ಆರ್‍ಟಿಸಿ ನಿರ್ದೇಶಕ ರಮೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ತಾಲೂಕು ಪಂಚಾಯಿತಿ ಅಧ್ಯಕ್ಷ ಮೊಹಮ್ಮದ್ ಮೋನು ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾನಂದ ವಂದಿಸಿದರು.

Exit mobile version