ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು: ರಾಜ್ಯದ ಜನರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ಸ್ಥಿತಿಯನ್ನು ಅರಿಯುವ ಸಲುವಾಗಿ ಜಾತಿ ಸಮೀಕ್ಷೆಯನ್ನು ರಾಜ್ಯ ಸರಕಾರ ಹಮ್ಮಿಕೊಂಡಿದ್ದು, ಹೊಸ ಯೋಜನೆಗಳನ್ನು ರೂಪಿಸುವ ಸಲುವಾಗಿ ಈ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಅವರು ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು
ರಾಜ್ಯದ 6.5 ಕೋಟಿ ಜನರು ಸಮಾನತೆ, ಸಾಮಾಜಿಕ ನ್ಯಾಯ, ಸಹೋದರತ್ವದ ಮನೋಭಾವವನ್ನು ಮೈಗೂಡಿಸಿಕೊಂಡು ಪ್ರೀತಿ ವಿಶ್ವಾಸದಿಂದ ಸಂವಿಧಾನಬದ್ಧವಾಗಿ ಬದುಕುವ ರೀತಿಯಲ್ಲಿ ರಾಜ್ಯ ಸರಕಾರ ಕೆಲಸಗಳನ್ನು ನಡೆಸುತ್ತಿದೆ. ಎ.11ರಿಂದ ಎ.30ರವರೆಗೆ ನಡೆಯಲಿರುವ ಜಾತಿ ಸಮೀಕ್ಷೆಯಲ್ಲಿ ಜನರ ಆರ್ಥಿಕ,ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ಕುರಿತ ವರದಿಯನ್ನು ಸಂಗ್ರಹಿಸಲಿದ್ದೇವೆ. ಇದು ಮುಂದೆ ಜನರಿಗೆ ಬೇಕಾದ ರೀತಿಯಲ್ಲಿ ಯೋಜನೆಗಳನ್ನು ರೂಪಿಸಲು ಸಹಕಾರಿಯಾಗುತ್ತದೆ. ಜಾತಿಯನ್ನು ಕೂಡಿಸುವ ಸಲುವಾಗಿ ಸಮೀಕ್ಷೆ ನಡೆಯುತ್ತಿದೆ. ಜಾತಿ ವಿಂಗಡಣೆ ಮಾಡಲೆಂದು ಕೆಲವರು ಟೀಕೆ ನಡೆಸುತ್ತಿರುವ ವಿಚಾರಕ್ಕೆ ಕಿವಿಗೊಡಬೇಡಿ ಎಂದರು .




ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿ ದೇವಸ್ಥಾನ ವಠಾರದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸಲ್ಲಿಸಿದ ಮನವಿಗೆ ಸ್ಪಂಧಿಸಿದ ಮುಖ್ಯಮಂತ್ರಿಗಳು ಮಂಜೂರುಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಕ್ರೀಡಾ ಸಚಿವ ಅಭಯಚಂದ್ರಜೈನ್, ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ಮಂಗಳೂರು ದಕ್ಷಿಣ ಶಾಸಕ ಮೊಯ್ದೀನ್ ಬಾವಾ, ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ, ಉಳ್ಳಾಲ ನಗರಸಭಾ ಅಧ್ಯಕ್ಷೆ ಗಿರಿಜಾ ಬಾೈ ಭಾಗವಹಿಸಿದ್ದರು.
ಶ್ರೀರಾಜರಾಜೇಶ್ವರಿ ಸಿದ್ಧಿವಿನಾಯಕ ಮಂದಿರದ ಅಧ್ಯಕ್ಷ ಚಂದ್ರಹಾಸ್ ಕೊಟ್ಟಾರಿ, ಗೌರವಾಧ್ಯಕ್ಷ ರಾಮಕೃಷ್ಣ ಕಾಯಂಗಳ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ದಿನೇಶ್ ಎಲ್. ಎಸ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.



















