UN NETWORKS
ದೇರಳಕಟ್ಟೆ: ದೇರಳಕಟ್ಟೆಯ ಕೆ.ಎಸ್ .ಹೆಗ್ಡೆ ವೈದ್ಯಕೀಯ ಮಹಾ ವಿದ್ಯಾಲಯದ ಮಾನಸಿಕ ರೋಗ ಚಿಕಿತ್ಸಾ ವಿಭಾಗ ಮತ್ತು ರಾಷ್ಟೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವಆತ್ಮಹತ್ಯೆ ತಡೆ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅರಿವಳಿಕಾ ವಿಭಾಗ ತಜ್ಞೆ ಡಾ. ಗಾಯತ್ರಿ ಭಟ್ ಆತ್ಮಹತ್ಯೆಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಕಳವಳಕಾರಿ ಸಂಗತಿ ಎಂದರು.
ಮಾನಸಿಕ ರೋಗ ಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನಿಶಿ ಗುರು ಮಾತಾನಾಡಿ ಆತ್ಮಹತ್ಯೆ ಮಾಡಿಕೊಳ್ಳುವವರಲ್ಲಿ ಬಹುತೇಕ ಯುವ ಪೀಳಿಗೆಯವರೇ ಆಗಿದ್ದಾರೆ. ಇಂದಿನ ಒತ್ತಡದ ಬದುಕಿನಲ್ಲಿಸಮಸ್ಯೆಗೆ ಹೆದರಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಆತ್ಮಹತ್ಯೆಯನ್ನು ತಡೆಗಟ್ಟುವಲ್ಲಿ ನಮ್ಮೆಲ್ಲರ ಪಾತ್ರ ಬಹು ಮುಖ್ಯ. ಅವರಿಗೆ ಸರಿಯಾದ ಮಾರ್ಗದರ್ಶನ, ಸಹಕಾರ ಸಮಸ್ಯೆಯನ್ನು ಹೇಗೆ ಎದುರಿಸಬೇಕು ಎನ್ನುವುದರ ಬಗ್ಗೆ ತಿಳುವಳಿಕೆ ನೀಡಿ ಆತ್ಮಹತ್ಯೆಯನ್ನು ತಡೆಗಟ್ಟಬಹುದು. ಸಮಸ್ಯೆಯನ್ನು ಎದುರಿಸಲು ಸಾಧ್ಯವಾಗದೆ ಇದ್ದಾಗ ಮನೆಮಂದಿ, ಗೆಳೆಯರು, ಸಹದ್ಯೋಗಿಗಳ ಸಹಾಯವನ್ನು ಪಡೆಯಿರಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮನೋವಿಜ್ಞಾನ ಚಿಕಿತ್ಸಕಿ ರೇಷ್ಮಾ ಮಾತನಾಡಿ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಸಮಸ್ಯೆಯನ್ನು ಎದುರಿಸಬೇಕು. ಆತ್ಮಹತ್ಯೆಗೆ ಪ್ರಯತ್ನಿಸಿದ ವ್ಯಕ್ತಿಯನ್ನು ಹೇಗೆ ನೋಡಿಕೊಳ್ಳಬೇಕು ಹಾಗು ಅವರಿಗೆ ಸಮಾಧಾನ ಸಹಕಾರ ನೀಡುವ ಮೂಲಕ ಧೈರ್ಯ ನೀಡಬೇಕು ಎಂದು ಹೇಳಿದರು.ಮನೋ ವೈದ್ಯಕೀಯ ಸಾಮಾಜಿಕ ಕಾರ್ಯಕರ್ತೆ ಮಾನಸಿಕ ರೋಗ ಚಿಕಿತ್ಸಾ ವಿಭಾಗದ ಆಗ್ನೆಟಾ ಕೆ. ಆತ್ಮಹತ್ಯೆ ತಡೆಗಟ್ಟುವಲ್ಲಿ ಸಹಾಯವಾಣಿಗಳ ಪಾತ್ರದ ಬಗ್ಗೆ ಮಾಹಿತಿ ನೀಡಿದರು.
ಸ್ನಾತ್ತಕೋತ್ತರ ಸಮಾಜ ಕಾರ್ಯದ ವಿದ್ಯಾರ್ಥಿಗಳು ಮೂಕಪಾತ್ರಾಭಿನಯ ನಡೆಸಿಕೊಟ್ಟರು. ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು. ಸಹಾಯಕ ಪ್ರಾಧ್ಯಾಪಕ ಡಾ. ಸಂತೋಷ್ ಪ್ರಭು ಸ್ವಾಗತಿಸಿದರು. ಸುಮನ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು. ಮನೋರೋಗ ತಜ್ಞ ಡಾ. ಶಿಶಿರ್ ಕುಮಾರ್ ವಂದಿಸಿದರು.