UN NETWORKS
ಮುಡಿಪು: ಮುಡಿಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ ಮುಡಿಪು ಕಾಲೇಜಿನಲ್ಲಿ ಶನಿವಾರ ನಡೆದ `ತೆಲಿಕೆದ ಐಸಿರಿ-2018′ ಅಂತರ್ ಕಾಲೇಜು ಮಟ್ಟದ ಸ್ಫರ್ಧೆಯಲ್ಲಿ ಕಲ್ಲಡ್ಕದ ಶ್ರೀರಾಮ ಪ್ರಥಮ ದರ್ಜೆ ಕಾಲೇಜು ಪ್ರಥಮ ಹಾಗೂ ವಾಮದಪದವು ಸರಕಾರಿ ಪದವಿ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ಕಾರ್ಯಕ್ರಮವನ್ನು ರಂಗಭೂಮಿ ಕಲಾವಿದ ಅರವಿಂದ ಬೋಳಾರ್ ಅವರು ಉದ್ಘಾಟಿಸಿ ಮಾತನಾಡಿದರು. ಬಳಿಕ ಮಾತನಾಡಿದ ಅವರು ಶಿಕ್ಷಣದೊಂದಿಗೆ ನಾವು ಇಂತಹ ಕಲಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಮುನ್ನಡೆದರೆ ಜ್ಞಾನದೊಂದಿಗೆ ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದೇ ಇರುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಇಂತಹ ಪ್ರತಿಭೆಗಳನ್ನು ಬಳಸಿಕೊಂಡು ಮುಂದುವರಿಯಿರಿ ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಗಿರಿಧರ್ ರಾವ್ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಇಂತಹ ಸ್ಫರ್ಧಾ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆಯಾ ಕ್ಷೇತ್ರದ ಜ್ಞಾನವನ್ನು ವಿಸ್ತರಿಸುತ್ತದೆ. ವಿದ್ಯಾರ್ಥಿಗಳು ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹಾಸ್ಯ ನಟ ಅರವಿಂದ ಬೋಳಾರ್ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.
ತೆಲಿಕೆ ಹಾಸ್ಯ ಪ್ರಹಸನ ಸ್ಪರ್ಧೆಯಲ್ಲಿ ವಿವಿಧ ಕಾಲೇಜುಗಳ ತಂಡಗಳು ಭಾಗವಹಿಸಿದ್ದವು. ತೀರ್ಪುಗಾರರಾಗಿ ರಂಗಭೂಮಿ ಕಲಾವಿದರಾದ ಶಶಿಧರ್ ಅಮೀನ್, ಸುಕುಮಾರ್ ಕುಂಪಲ ಮತ್ತು ದಿವ್ಯ ಅವರು ಭಾಗವಹಿಸಿದ್ದರು. ವಿಜೇತ ತಂಡಗಳಿಗೆ ಶಾಶ್ವತ ಫಲಕ, ಪ್ರಶಸ್ತಿ ಪತ್ರ ಹಾಗೂ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾಲೇಜಿನ ದೈಹಿಕ ನಿರ್ದೇಶಕರಾದ ಶುಭ.ಎಚ್ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿಶಿಕಾಂತ್ ಅವರು ವಂದಿಸಿದರು. ಅಮೃತ ಮತ್ತು ಸಂದ್ಯಾ ಕಾರ್ಯಕ್ರಮ ನಿರೂಪಿಸಿದರು.


