Site icon Ullalavani

ಮಂಗಳೂರು ವಿವಿಯಲ್ಲಿ ಆ.27 ಕ್ಕೆ ‘ಯಕ್ಷ ಪುರುಷೋತ್ತಮ’ ಬೊಟ್ಟಿಕೆರೆ ಪುರುಷೋತ್ತಮ ಪೂಂಜರ ಸಂಸ್ಮರಣೆ, ಕೃತಿ ಬಿಡುಗಡೆ, ಮಾನಿಷಾದ ಯಕ್ಷಗಾನ ಪ್ರದರ್ಶನ

UN networks

ಕೊಣಾಜೆ: ಅಂಬುರುಹ ಯಕ್ಷಸದನ ಪ್ರತಿಷ್ಠಾನ ಬೊಟ್ಟಿಕೆರೆ(ರಿ) ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ  ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಇದರ ವತಿಯಿಂದ ಅಭಿನವ ವಾಲ್ಮೀಕಿ, ಯಕ್ಷಗಾನ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜರ ಸಂಸ್ಮರಣಾ ಕಾರ್ಯಕ್ರಮ ಆ.27 ಶನಿವಾರದಂದು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ.
  ಬೆಳಿಗ್ಗೆ 10 ರಿಂದ ಉದ್ಘಾಟನಾ ಸಮಾರಂಭ ನಡೆಯಲಿದ್ದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ.ಜಿ.ಎಲ್. ಹೆಗಡೆ ಕುಮಟಾ ಅವರು ಯಕ್ಷ ಪುರುಷೋತ್ತಮ ಸಂಸ್ಮರಣ ಗ್ರಂಥ ಬಿಡುಗಡೆಗೊಳಿಸಲಿದ್ದು,  ಹಿರಿಯ ಕಲಾವಿದರಾದ ವಿಶ್ವೇಶ್ವರ ಭಟ್ ಸುಣ್ಣಂಬಳ ಅವರು ಸಂಸ್ಮರಣಾ ಭಾಷಣ ಮಾಡಲಿದ್ದಾರೆ. 
ಮುಖ್ಯ ಅಭ್ಯಾಗತರಾಗಿ ಯಕ್ಷಗಾನ ವಿದ್ವಾಂಸರಾದ ಡಾ.ಎಂ.ಪ್ರಭಾಕರ ಜೋಷಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಕದ್ರಿ ನವನೀತ ಶೆಟ್ಟಿ, ಯಕ್ಷ‌ ಪುರುಷೋತ್ತಮ ಸಂಪಾದಕರಾದ‌ ಭಾಸ್ಕರ ರೈ ಕುಕ್ಕುವಳ್ಳಿ, ಮುಂಬಾಯಿ ಅಜೆಕಾರು ಕಲಾಭಿಮಾನಿಬಳಗದ ಅಜೆಕಾರು ಬಾಲಕೃಷ್ಣ ಶೆಟ್ಟಿ, ಮಂಗಳೂರು ವಿವಿ ಯಕ್ಷಗಾನ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಪ್ರೊ.ಶ್ರೀಪತಿ ಕಲ್ಲೂರಾಯ ಅವರು ಭಾಗವಹಿಸಲಿದ್ದಾರೆ.
ಕಟೀಲು ಮೇಳದ ಸಂಚಾಲಕರಾದ ಕಲ್ಲಾಡಿ ದೇವಿ ಪ್ರಸಾದ್ ಶೆಟ್ಟಿ, ಮಂಜನಾಡಿ ವಿಷ್ಣುಮೂರ್ತಿ ದೇವಸ್ಥಾನದ ಆನುವಂಶಿಕ ಮೊಕ್ತೇಸರ ಟಿ.ಸುಬ್ರಮಣ್ಯ ಭಟ್, ಅಂಬುರುಹ ಯಕ್ಷಸದನ ಪ್ರತಿಷ್ಠಾನದ ಅಧ್ಯಕ್ಷರಾದ ಶೋಭಾ ಪುರುಷೋತ್ತಮ ಪೂಂಜ, ಉಪಾಧ್ಯಕ್ಷ ರಾದ ರಾಜರಾಮ ಹೊಳ್ಳ ಕೈರಂಗಳ ಉಪಸ್ಥಿತರಿರಲಿದ್ದಾರೆ.
  ಸಭಾ ಕಾರ್ಯಕ್ರಮದ ಬಳಿಕ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ ‘ಮಾನಿಷಾದ’ ಯಕ್ಷಗಾನ ಪ್ರದರ್ಶನ ನಡೆಯಲಿದ್ದು, ಮಂಗಳೂರು ವಿವಿ ಕುಲಸಚಿವ ಡಾ.ಕಿಶೋರ್ ಕುಮಾರ್ ಸಿ.ಕೆ‌ ದೀಪಪ್ರಜ್ವಲನೆ ಮಾಡಲಿದ್ದಾರೆ ಹಾಗೂ ಯಕ್ಷಗಾನ ಪ್ರದರ್ಶನದಲ್ಲಿ ಪ್ರಸಿದ್ಧ ಯಕ್ಷಗಾನ‌ ಕಲಾವಿದರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Exit mobile version