UN networks
ಬೋಳಿಯಾರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಸರಕಾರದ ಜನಸ್ನೇಹಿ ಕಾರ್ಯಕ್ರಮದ ಅಂಗವಾಗಿ ತಹಶೀಲ್ದಾರರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಲಾಗುತ್ತದೆ. ಇಲಾಖೆಯ ಎಲ್ಲಾ ಯೋಜನೆಗಳನ್ನು ಅರ್ಹರಿಗೆ ಕಾಲಮಿತಿಯಲ್ಲಿ ತಲುಪಿಸುವುದು ಇದರ ಉದ್ದೇಶವಾಗಿದ್ದು ಸ್ಥಳದಲ್ಲಿ ಇತ್ಯರ್ಥ ಪಡಿಸಲು ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು ಹಾಜರಿದ್ದು ಕಾರ್ಯನಿರ್ವಹಿಸುತ್ತಾರೆ ಎಂದು ಉಳ್ಳಾಲ ತಾಲೂಕು ತಹಶೀಲ್ದಾರ್ ಡಿ.ಎ ಪುಟ್ಟರಾಜು ಅಭಿಪ್ರಾಯಪಟ್ಟರು.
ಅವರು ಉಳ್ಳಾಲ ತಾಲೂಕು ಬೋಳಿಯಾರು ಗ್ರಾಮದಲ್ಲಿ ನಡೆದ ತಹಶೀಲ್ದಾರರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.



ತಹಶೀಲ್ದಾರ್ ಡಿ.ಎ ಪುಟ್ಟರಾಜು, ಬೋಳಿಯಾರು ಗ್ರಾ.ಪಂ ಅಧ್ಯಕ್ಷೆ ಜೆಸಿಂತಾ ಪಿಂಟೋ, ಉಪಾಧ್ಯಕ್ಷರಾದ ಅಬ್ದುಲ್ ಶಕೂರ್, ಉಪತಹಶೀಲ್ದಾರರಾದ ನವನೀತ್ ಮಾಳವ, ಕಂದಾಯ ನಿರೀಕ್ಷಕರಾದ ಮಂಜುನಾಥ ಕೆ ಹೆಚ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾರಾಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆರೋಗ್ಯ ಇಲಾಖೆಯಿಂದ ಬೋಳಿಯಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುನೀತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರೀಶ್ ಕೆ, ಶಿಕ್ಷಣ ಇಲಾಖೆ ವತಿಯಿಂದ ಕ್ಷೇತ್ರ ಸಮನ್ವಯಾಧಿಕಾರಿ ಪ್ರಶಾಂತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಜಯ ಕುಮಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಈ ಸಂದರ್ಭ ಎಲ್ಲಾ ಇಲಾಖೆಯ ಸವಲತ್ತುಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ವಿವಿಧ ವೇತನದ ಮಂಜೂರಾತಿ ಆದೇಶದ ಪ್ರತಿಯನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ತಹಶೀಲ್ದಾರರು ಪಲ್ಲ ಸೈಟ್ ಎಂಬಲ್ಲಿ ರಸ್ತೆ ತಕರಾರಿನ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದರು. ಕೊರಗ ಸಮಾಜದ ಕಾಲೊನಿಗೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. ಅಂಬೇಡ್ಕರ್ ಭವನ ನಿರ್ಮಾಣ, ರಾಜಕಾಲುವೆ ಒತ್ತುವರಿ ಬಗ್ಗೆ ಸ್ಥಳ ಪರಿಶೀಲಿಸಿದರು. ಹಾಗೂ ವಿವಿಧ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಿಂದ ಬಂದ ಮನವಿಯನ್ನು ಸ್ವೀಕರಿಸಿ ಸ್ಥಳದಲ್ಲಿ ಪರಿಹಾರವನ್ನು ಸೂಚಿಸಲಾಯಿತು. ಗ್ರಾಮಕರಣಿಕರಾದ ಲಾವಣ್ಯ, ರೇಷ್ಮಾ, ನವ್ಯ ಎಸ್.ಎನ್ ರಾವ್, ತೌಫಿಕ್, ನಿಂಗಪ್ಪ ಜಜ್ಜೂರಿ ಉಪಸ್ಥಿತರಿದ್ದರು.


