Site icon Ullalavani

ಕುತ್ತಾರು ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗೆ ಜೈಲಿನಲ್ಲಿ ಹಲ್ಲೆ , ಹಫ್ತಾ ವಸೂಲಿ ಸಹಖೈದಿಗಳ ವಿರುದ್ಧ ಕೆ-ಕೋಕಾ ಪ್ರಕರಣ ದಾಖಲು : ಪೊಲೀಸ್‌ ಕಮೀಷನರ್‌

ಮಂಗಳೂರು : ಕುತ್ತಾರು ಸಮೀಪ ಹೊರರಾಜ್ಯದ ಯುವತಿಗೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಜೈಲುಪಾಲಾಗಿದ್ದ ಆರೋಪಿಯಿಂದ ಸಹಖೈದಿಗಳು ಹಫ್ತಾ ವಸೂಲಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ
ನಾಲ್ವರು ಸಹ ಕೈದಿಗಳ ವಿರುದ್ಧ ಕೆ-ಕೋಕಾ (ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಸ್ಡ್ ಆ್ಯಕ್ಟ್) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.


ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಎ.18 ರಂದು ನಡೆದಿದ್ದ ಹೊರರಾಜ್ಯದ ಯುವತಿಯ ಸಾಮೂಹಿಕ ಅತ್ಯಾಚಾರದಲ್ಲಿ ಕುಂಪಲ ನಿವಾಸಿ ಮಿಥುನ್‌ ಸೇರಿದಂತೆ ಮೂವರ ಬಂಧನವಾಗಿತ್ತು. ಜೈಲುಪಾಲಾಗಿದ್ದ ಮಿಥುನ್ ಎಂಬಾತನಿಗೆ ಸಹ ಕೈದಿಗಳಾದ ಧನು ಯಾನೆ ಧನುಷ್ ಭಂಡಾರಿ, ಸಚಿನ್ ತಲಪಾಡಿ, ದಿಲೇಶ್ ಬಂಗೇರ ಯಾನೆ ದಿಲ್ಲು, ಲಾಯಿ ವೇಗಸ್ ಎಂಬವರು ಜು.9ರಂದು ಸಂಜೆ 5ಕ್ಕೆ ಜೈಲು ಸಿಬ್ಬಂದಿಯ ಕಣ್ತಪ್ಪಿಸಿ ಹಲ್ಲೆ ನಡೆಸಿ 50 ಸಾವಿರ ರೂ. ನೀಡುವಂತೆ ಒತ್ತಾಯಿಸಿದ್ದರು. ಅಲ್ಲದೆ ಜೈಲು ಅಧಿಕಾರಿಗಳಿಗೆ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಹಾಗಾಗಿ ಮಿಥುನ್ ಪ್ರಾಣಭಯದಿಂದ ದೂರು ನೀಡದೆ ಹಲ್ಲೆ ನಡೆಸಿದ್ದ ಕೈದಿ ಸಚಿನ್ ಎಂಬಾತ ಕೊಟ್ಟ ಎರಡು ಮೊಬೈಲ್ ಸಂಖ್ಯೆಗೆ ಪತ್ನಿಯ ಮೂಲಕ 20 ಸಾವಿರ ರೂ. ಫೋನ್ ಪೇ ಮಾಡಿಸಿದ್ದ. ಜು.12ರಂದು ಮಂಗಳೂರು ಕೇಂದ್ರ ಸಹಾಯಕ ಪೊಲೀಸ್ ಆಯಕ್ತರು ಹಾಗೂ ಬರ್ಕೆ ಪೊಲೀಸ್ ಠಾಣೆಯ ನಿರೀಕ್ಷಕರು ಕಾರಾಗೃಹದ ತಪಾಸಣೆ ಮಾಡಲು ತೆರಳಿದ ವೇಳೆ ಈ ಪ್ರಕರಣ ಬೆಳಕಿಗೆ ಬಂದಿತ್ತು. ಹಾಗೇ ಜಿಲ್ಲಾ ಕಾರಾಗೃಹದ ಅಧೀಕ್ಷ ಶರಣಬಸಪ್ಪ ಬರ್ಕೆ ಠಾಣೆಗೆ ದೂರು ನೀಡಿದ್ದರು. ಇದೀಗ ಕೈದಿಗೆ ಜೈಲಿನಲ್ಲೇ ಹಲ್ಲೆ ನಡೆಸಿದ್ದ ಸಹಕೈದಿಗಳ ವಿರುದ್ಧ ಕೆ-ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈಗಾಗಲೆ ಆರೋಪಿಗಳು ಒಂದಕ್ಕಿಂತ ಹೆಚ್ಚು ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಇದೀಗ ಕೆ-ಕೋಕಾ ಕಾಯ್ದೆಯಡಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿ 5 ವರ್ಷದ ಶಿಕ್ಷೆ ವಿಧಿಸಬಹುದಾಗಿದ್ದು, ಅದನ್ನು ಜೀವಾವಧಿ ಶಿಕ್ಷೆಯವರಿಗೆ ವಿಸ್ತರಿಸಬಹುದಾಗಿದೆ. ಆರೋಪಿಗಳ ಕೃತ್ಯದಿಂದ ಸಾವು ಸಂಭವಿಸಿದರೆ ಜೀವಾವಧಿ ಅಥವಾ ಮರಣದಂಡನೆ ಶಿಕ್ಷೆ ವಿಧಿಸಬಹುದಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Exit mobile version