ಮಂಗಳೂರು, ಮಾ. 03 : ಬಜ್ಪೆಯಲ್ಲಿ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಫೋಟೋ ಇರುವ ಇನ್ಸ್ಟಾಗ್ರಾಮ್ ಪೇಜ್ನಲ್ಲಿ, ಉಳ್ಳಾಲದ ಮಸೀದಿಯ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ ಹಾಕಿದ್ದ ದುಷ್ಕರ್ಮಿಯ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಶಂಕರ್11916’ ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪ್ರಚೋದನಕಾರಿ ಸಂದೇಶವೊಂದನ್ನು ಪೋಸ್ಟ್ ಮಾಡಲಾಗಿದೆ. ಈ ಖಾತೆಯಲ್ಲಿ ‘ಸಪೋರ್ಟ್ ಮಾಡಿ ಬ್ರೋ ಉಳ್ಳಾಲ ಮಸೀದಿ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ’ ಎಂದು ಸಂದೇಶ ಹಾಕಲಾಗಿತ್ತು. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು.ಸೋಮವಾರ ಸಾಮಾಜಿಕ ಜಾಲತಾಣದ ಮೋನಿಟರಿಂಗ್ ಕರ್ತವ್ಯ ನಿರ್ವಹಿಸುತ್ತಿದ್ದ ಉಳ್ಳಾಲ ಪೊಲೀಸ್ ಠಾಣೆಯ ಸಿಬ್ಬಂದಿ ಸಂತೋಷ್ ದೊಡ್ಡಮನಿ ಅವರು ಈ ಸಂದೇಶವನ್ನು ಗಮನಿಸಿ ದೂರು ನೀಡಿದ್ದಾರೆ. ಅವರ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಯು ಧರ್ಮಗಳ ನಡುವೆ ದ್ವೇಷವನ್ನು ಸೃಷ್ಟಿಸುವ ಉದ್ದೇಶ ಹೊಂದಿದ್ದಾನೆ. ಹಿಂಸಾಚಾರವನ್ನು ಪ್ರಚೋದಿಸಲು ಮತ್ತು ಜನರನ್ನು ಎತ್ತಿಕಟ್ಟಲು ಈ ಪೋಸ್ಟ್ ಮಾಡಲಾಗಿದೆ. ಹೀಗಾಗಿ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.”ಈ ಸಂದೇಶ ಹಾಕಿದ ವ್ಯಕ್ತಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರು ತಿಳಿಸಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಇಂತಹ ಸಂದೇಶ ಹರಡಿದ ದುಷ್ಕರ್ಮಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಸೂಚಿಸಿದ್ದಾರೆ.ಈ ಬಗ್ಗೆ ಪೊಲೀಸ್ ಕಮಿಷನರ್ ಅವರೊಂದಿಗೆ ಮಾತನಾಡಿದ ಖಾದರ್, “ಉಳ್ಳಾಲದಲ್ಲಿ ಎಲ್ಲಾ ಧರ್ಮದ ಜನರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಇಂತಹ ಬೆದರಿಕೆ ಪೋಸ್ಟ್ಗಳ ಮೂಲಕ ಕೋಮು ಸೌಹಾರ್ದತೆಯನ್ನು ಕದಡುವ ಪ್ರಯತ್ನಗಳ ವಿರುದ್ಧ ಪೊಲೀಸ್ ಇಲಾಖೆ ಜಾಗರೂಕತೆಯಿಂದ ಇರಬೇಕು” ಎಂದಿದ್ದಾರೆ.


