ಮಂಗಳೂರು, ಮಾ. 27 : ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಇತ್ತೀಚೆಗೆ ನಿಧನರಾದ ಯಕ್ಷಗಾನ ರಂಗದ ದಶಾವತಾರಿ, ತೆಂಕುತಿಟ್ಟಿನ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ ಹಾಗೂ ದೈವ ನರ್ತಕ ರವೀಶ್ ಪಡುಮಲೆಯವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ.

ಮಾರ್ಚ್ 28 ರಂದು ಮಂಗಳಗಂಗೋತ್ರಿ ಸಭಾಂಗಣದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ವಿವಿ ಕುಲಪತಿ ಪ್ರೊ. ಪಿ. ಎಲ್. ಧರ್ಮ ತಿಳಿಸಿದ್ದಾರೆ.
ಹರೇಕಳ ಹಾಜಬ್ಬ
ಪದ್ಮಶ್ರೀ ಪುರಸ್ಕೃತರಾದ ಹಾಜಬ್ಬ ಅವರು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದವರು. ಕಿತ್ತಳೆ ಹಣ್ಣು ಮಾರಿ ಬಂದ ಹಣದಲ್ಲಿ ತಮ್ಮ ಗ್ರಾಮವಾದ ಹರೇಕಳ-ನ್ಯೂಪಡ್ಪುವಿನಲ್ಲಿ ಶಾಲೆ ನಿರ್ಮಿಸಿ, ಗ್ರಾಮೀಣ ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿದ ಇವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ.ಸೂರಿಕುಮೇರು ಗೋವಿಂದ ಭಟ್
ಯಕ್ಷಗಾನದ ತೆಂಕುತಿಟ್ಟು ಶೈಲಿಯ ಹಿರಿಯ ಕಲಾವಿದರಾದ ಸೂರಿಕುಮೇರು ಗೋವಿಂದ ಭಟ್ ಅವರಿಗೆ ಮರಣೋತ್ತರವಾಗಿ ಈ ಗೌರವ ಪ್ರದಾನ ಮಾಡಲಾಗುತ್ತಿದೆ. ‘ದಶಾವತಾರಿ’ ಎಂದೇ ಖ್ಯಾತರಾಗಿದ್ದ ಇವರು ಸುಮಾರು 7 ದಶಕಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಧರ್ಮಸ್ಥಳ ಮೇಳದಲ್ಲಿ 50 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ಇವರು, ಕೌರವ, ಭೀಷ್ಮ ಮತ್ತು ರಕ್ತಬೀಜಾಸುರನಂತಹ ಪಾತ್ರಗಳಿಗೆ ಜೀವ ತುಂಬಿದ್ದರು.ಡಾ. ರವೀಶ್ ಪಡುಮಲೆ
ಡಾ. ರವೀಶ್ ಪಡುಮಲೆ ಅವರು ಪ್ರಸಿದ್ಧ ದೈವ ನರ್ತಕರಷ್ಟೇ ಅಲ್ಲದೆ, ಚಿಂತಕರು ಮತ್ತು ಶಿಕ್ಷಣ ತಜ್ಞರೂ ಆಗಿದ್ದಾರೆ. ಉಜಿರೆಯ ಎಸ್ಡಿಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ಶೈಕ್ಷಣಿಕ ವೃತ್ತಿಯ ಜೊತೆಗೆ ದೈವ ನರ್ತನ ಕಲೆ ಮತ್ತು ಹಿಂದೂ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ.


