ಮಂಗಳೂರು: ನಗರದ ಪದವು ಕುಲಶೇಖರದಲ್ಲಿ ಹಿಂದು ಯುವಸೇನೆ ಸಂಚಾಲಿತ ಧಾರ್ಮಿಕ ಶ್ರದ್ಧಾಕೇಂದ್ರವಾದ ಶ್ರೀ ಶನೈಶ್ಚರ ದೇವಸ್ಥಾನದ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಎ. 18 ರಿಂದ 24 ರವರೆಗೆ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಅವರು ದೇವಾಲಯದ ಆವರಣದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.ಎಂ. ಗಿರಿಧರ ಭಟ್ ಮತ್ತು ಡಾ. ಸತ್ಯಕೃಷ್ಣ ಭಟ್ ಅವರ ನೇತೃತ್ವದಲ್ಲಿ ಈ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ಏಪ್ರಿಲ್ 18ರಂದು ಸಾಮೂಹಿಕ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಗಳು ಆರಂಭವಾಗಲಿದೆ. 108 ಕಾಯಿ ಗಣಯಾಗ, ರುದ್ರಯಾಗ ಹಾಗೂ ಏಪ್ರಿಲ್ 22 ರವರೆಗೆ ಲಕ್ಷ್ಮೀನಾರಾಯಣ ಪ್ರಧಾನ ಹೋಮ ನಡೆಯಲಿದ್ದು, ಏಪ್ರಿಲ್ 23 ರಂದು ಗಣಪತಿ, ದುರ್ಗಾ, ನವಗ್ರಹ ಸಹಿತ ಶ್ರೀ ಶನೈಶ್ಚರ ದೇವರ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲ ಶಾಭಿಷೇಕ ನೆರವೇರಲಿದೆ. ಏಪ್ರಿಲ್ 24 ರಂದು ಚಂಡಿಕಾಯಾಗ ಮತ್ತು ಸಮಗ್ರ ಶನೈಶ್ಚರ ಮಹಾಯಾಗದೊಂದಿಗೆ ಉತ್ಸವವು ಸಂಪನ್ನಗೊಳ್ಳಲಿದೆ.
ಉತ್ಸವದ ಅಂಗವಾಗಿ ಏಪ್ರಿಲ್ 19 ರಂದು ಬೆಳಿಗ್ಗೆ 9 ಗಂಟೆಗೆ ಶರವು ಮಹಾಗಣಪತಿ ದೇವಸ್ಥಾನದಿಂದ ಪದವು ದೇವಸ್ಥಾನದವರೆಗೆ ಹಸಿರುವಾಣಿ (ಹೊರೆಕಾಣಿಕೆ) ಮೆರವಣಿಗೆ ನಡೆಯಲಿದ್ದು, ಶ್ರೀ ಶರವು ರಾಘವೇಂದ್ರ ಶಾಸ್ತ್ರಿಗಳು ಚಾಲನೆ ನೀಡಲಿದ್ದಾರೆ. ಅಂದು ಸಂಜೆ ಶಿವಾಜಿ ಮಂಟಪದಲ್ಲಿ ಹಿಂದು ಯುವಸೇನೆಯ ಸಮಾವೇಶ ಜರುಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಭಾಗವಾಗಿ ಯಕ್ಷಗಾನ, ನಾಟಕ ಹಾಗೂ ಸಂಗೀತ ಲಹರಿಗಳು ಪ್ರದರ್ಶನ ಗೊಳ್ಳಲಿವೆ. ಪ್ರತಿದಿನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಇರಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವಂತೆ ವಿನಂತಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಶಾಸಕ ವೇದವ್ಯಾಸ ಕಾಮತ್, ಪ್ರದಾನ ಕಾರ್ಯದರ್ಶಿ ಬಾಸ್ಕರ ಚಂದ್ರ ಶೆಟ್ಟಿ, ಶನಿಶ್ಚರ ಪೂಜಾ ಸಮಿತಿ ಅದ್ಯಕ್ಷರಾದ ರಾಮಚಂದ್ರ ಚೌಟ, ಮಾತೃಮಂಡಳಿ ಅಧ್ಯಕ್ಷರಾದ ವಿಜಯ ಅರುಣ್, ದೇವಸ್ಥಾನ ನಿರ್ಮಾಣ ಸಮಿತಿ ಅಧ್ಯಕ್ಷರಾದ ಕದ್ರಿ ನವನೀತ ಶೆಟ್ಟಿ ಮತ್ತು ಉಮೇಶ್ ರೈ ಮೊದಲಾದವರು ಉಪಸ್ಥಿತರಿದ್ದರು.

