ಬೆಂಗಳೂರು, ಏ. 22 : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪ ಹೆಚ್ಚಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ಹವಾಮಾನ ಇಲಾಖೆ ‘ಎಲ್ ನಿನೋ’ ಉಂಟಾಗುವ ಸಾಧ್ಯತೆಯನ್ನು ಸೂಚಿಸಿರುವುದು ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.
ಪೆಸಿಫಿಕ್ ಸಾಗರದ ಮೇಲ್ಮೈ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಾದಾಗ ಉಂಟಾಗುವ ಹವಾಮಾನ ವೈಪರೀತ್ಯವನ್ನೇ ‘ಎಲ್ ನಿನೋ’ ಎಂದು ಕರೆಯಲಾಗುತ್ತದೆ. ಇದರ ಪರಿಣಾಮವಾಗಿ ವಾತಾವರಣದಲ್ಲಿನ ತೇವಾಂಶ ಕಡಿಮೆಯಾಗುತ್ತದೆ ಹಾಗೂ ಗಾಳಿಯ ಚಲನವಲನದಲ್ಲಿ ಬದಲಾವಣೆ ಉಂಟಾಗುತ್ತದೆ. ಇದರ ನೇರ ಪರಿಣಾಮ ನೈಋತ್ಯ ಮುಂಗಾರು ಮಳೆಯ ಮೇಲೆ ಬೀಳಲಿದ್ದು, ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.ಮಳೆ ಕೊರತೆಯಿಂದ ಉಷ್ಣಾಂಶ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದ್ದು, ಬರಗಾಲದಂತಹ ಪರಿಸ್ಥಿತಿ ಎದುರಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಮುಂಗಾರು ಮಳೆ ಕುಂಠಿತವಾದರೆ ಕೃಷಿ ಉತ್ಪಾದನೆ ಮೇಲೆ ಗಂಭೀರ ಪರಿಣಾಮ ಬೀಳಲಿದೆ. ಆಹಾರ ಧಾನ್ಯಗಳ ಉತ್ಪಾದನೆ ಇಳಿಕೆಯಾಗುವುದರಿಂದ ಆಹಾರ ಭದ್ರತೆ ಕುಂಠಿತವಾಗುವ ಜೊತೆಗೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ಸಾಧ್ಯತೆ ಇದೆ. ಮಹಾರಾಷ್ಟ್ರ ಸರ್ಕಾರ ಈಗಾಗಲೇ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದೆ.ಒಡಿಶಾ ರಾಜ್ಯದ ತಿಟ್ಲಾಘರ್ನಲ್ಲಿ 42.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇದರಿಂದ 9 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಶಾಲಾ ಸಮಯವನ್ನು ಬೆಳಗ್ಗೆ 7:30ರಿಂದ ಮಧ್ಯಾಹ್ನ 1:30ರವರೆಗೆ ಬದಲಿಸಲಾಗಿದೆ. ಜೊತೆಗೆ ಜಾರ್ಖಂಡ್ ಮತ್ತು ಮಹಾರಾಷ್ಟ್ರದಲ್ಲಿಯೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕ್ರಮಗಳನ್ನು ಕೈಗೊಳ್ಳಲಾಗಿದೆ.ಒಟ್ಟಾರೆಯಾಗಿ, ಈಗಾಗಲೇ ಉರಿಯುತ್ತಿರುವ ಭೂಮಿಗೆ ‘ಎಲ್ ನಿನೋ’ ಪ್ರಭಾವ ಮತ್ತಷ್ಟು ತಾಪ ಹೆಚ್ಚಿಸುವ ಸಾಧ್ಯತೆ ಇದ್ದು, ಮುಂಬರುವ ದಿನಗಳಲ್ಲಿ ಬರಗಾಲವನ್ನು ಎದುರಿಸಲು ಮುನ್ನೆಚ್ಚರಿಕೆ ಕ್ರಮಗಳು ಅಗತ್ಯವಾಗಿವೆ.