Site icon Ullalavani

ಕುಕ್ಕೆ ಸುಬ್ರಹ್ಮಣ್ಯ – ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಕಡಬ, ಮೇ. 13 ;ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಭಕ್ತರಿಗೆ ಇದೀಗ ಹೆಚ್ಚುವರಿ ಒಂದು ಗಂಟೆಯ ದರ್ಶನಕ್ಕೆ ಅವಕಾಶ ಲಭ್ಯವಾಗಿದೆ.

ಈ ಮೊದಲು ಪ್ರತಿ ನಿತ್ಯ ಮಧ್ಯಾಹ್ನ 1.30ರಿಂದ 3.30ರ ವರೆಗೆ ದೇವರ ದರ್ಶನವನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗಿತ್ತು. ಆದರೆ ಭಕ್ತರ ಅನುಕೂಲಕ್ಕಾಗಿ ಇದೀಗ ಮಧ್ಯಾಹ್ನ 2ರಿಂದ 3ರ ವರೆಗೆ ಮಾತ್ರ ದರ್ಶನವನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ನಿರ್ಧರಿಸಲಾಗಿದೆ. ಇದರೊಂದಿಗೆ ಪ್ರತಿ ದಿನ ಭಕ್ತರಿಗೆ ಮಧ್ಯಾಹ್ನ ಇನ್ನೊಂದು ಗಂಟೆ ಹೆಚ್ಚುವರಿ ದರ್ಶನದ ಅವಕಾಶ ದೊರಕಿದೆ. ದೇವಸ್ಥಾನದ ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ ಈ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಯಾತ್ರಾ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯದ ವಿವಿಧ ಭಾಗಗಳಷ್ಟೇ ಅಲ್ಲದೆ ಹೊರರಾಜ್ಯಗಳಿಂದಲೂ ಸಾವಿರಾರು ಭಕ್ತರು ಆಗಮಿಸುತ್ತಾರೆ. ವಿಶೇಷವಾಗಿ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ವಿವಿಧ ಸೇವೆಗಳಿಗಾಗಿ ಪ್ರತಿದಿನ ಭಕ್ತರ ದಟ್ಟಣೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ದರ್ಶನ ಸಮಯ ವಿಸ್ತರಣೆ ಮಹತ್ವದ ನಿರ್ಧಾರವಾಗಿದೆ.ಈ ಬಗ್ಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್. ಇಂಜಾಡಿ ಮಾತನಾಡಿ, ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇವರ ದರ್ಶನ ಸಮಯವನ್ನು ವಿಸ್ತರಿಸಲಾಗಿದೆ. ಭಕ್ತರಿಗೆ ಅನುಕೂಲವಾಗುವ ಉದ್ದೇಶದಿಂದ ಹೆಚ್ಚುವರಿ ಒಂದು ಗಂಟೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.ಈ ಹಿಂದೆ ಮಧ್ಯಾಹ್ನ 1.30ರಿಂದ 3.30ರವರೆಗೆ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಇದೀಗ ದೇವಸ್ಥಾನ ಆಡಳಿತ ಮಂಡಳಿ ಕೈಗೊಂಡಿರುವ ಹೊಸ ನಿರ್ಣಯದಂತೆ ಮಧ್ಯಾಹ್ನ 2.00ರಿಂದ 3.00ರವರೆಗೆ ಮಾತ್ರ ದೇವಸ್ಥಾನವನ್ನು ಬಂದ್ ಮಾಡಲಾಗುತ್ತದೆ. ಇದರೊಂದಿಗೆ ಭಕ್ತರಿಗೆ ಹೆಚ್ಚುವರಿ ಒಂದು ಗಂಟೆ ದರ್ಶನ ಸೌಲಭ್ಯ ದೊರೆಯಲಿದೆ. ಹೊಸ ವೇಳಾಪಟ್ಟಿಯ ಪ್ರಕಾರ, ಪ್ರತಿದಿನ ಬೆಳಗ್ಗೆ 6.30ರಿಂದ ಮಧ್ಯಾಹ್ನ 2.00ರವರೆಗೆ ಹಾಗೂ ಮಧ್ಯಾಹ್ನ 3.00ರಿಂದ ರಾತ್ರಿ 8.30ರವರೆಗೆ ಭಕ್ತರು ದೇವರ ದರ್ಶನ ಪಡೆಯಬಹುದು. ಇನ್ನು ಶ್ರೀ ದೇವರ ಮಧ್ಯಾಹ್ನ ಮತ್ತು ರಾತ್ರಿ ಮಹಾಪೂಜೆ ನಡೆಯುವ ಸಮಯದಲ್ಲಿ ಮಾತ್ರ ಹಿಂದಿನಂತೆ ಅಲ್ಪಾವಧಿಗೆ ದರ್ಶನ ಸ್ಥಗಿತಗೊಳಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

Exit mobile version