ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೆಲವು ಪ್ರದೇಶಗಳಿಗೆ ಪೂರೈಸುತ್ತಿರುವ ಕುಡಿಯುವ ನೀರು ಬಳಕೆಗೆ ಯೋಗ್ಯವಾಗಿಲ್ಲ ಎಂಬ ಆತಂಕವನ್ನು ಈ ಹಿಂದೆ ಉಳ್ಳಾಲವಾಣಿ ವರದಿಯ ಮೂಲಕ ಜನರ ಗಮನಕ್ಕೆ ತಂದಿತ್ತು. ಇದೀಗ ಮಂಗಳೂರಿನ ವಿವಿಧ ಪ್ರದೇಶಗಳಲ್ಲಿ 100ಕ್ಕೂ ಹೆಚ್ಚು ಜನರು ವಾಂತಿ, ಬೇಧಿ ಸೇರಿದಂತೆ ಆರೋಗ್ಯ ಸಮಸ್ಯೆಗಳಿಂದ ಅಸ್ವಸ್ಥರಾಗಿರುವ ಘಟನೆಗಳು ಸಾರ್ವಜನಿಕ ವಲಯಗಳಲ್ಲಿ ಇದ್ದು ಇದು ಆತಂಕಕ್ಕೆ ಕಾರಣವಾಗಿದೆ.

ಸ್ವಾರ್ಟ್ ಸಿಟಿ ಮಂಗಳೂರಿನಲ್ಲಿ ಮಳೆಗಾಲದ ಸಂದರ್ಭದಲ್ಲಿ ಸಮರ್ಪಕವಾದ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ, ಚರಂಡಿ ನೀರು ಕುಡಿಯುವ ನೀರಿನ ಪೈಪ್ಗಳಿಗೆ ಬೆರೆತು ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಈ ಹಿಂದೆಯೇ ಎಚ್ಚರಿಸಲಾಗಿತ್ತು. ಇದೀಗ ನಡೆದಿರುವ ಬೆಳವಣಿಗೆಗಳು ಆ ಆತಂಕವನ್ನು ಮತ್ತೊಮ್ಮೆ ದೃಢಪಡಿಸುತ್ತಿವೆ.
ಈ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ, ಸಮಸ್ಯೆಯ ಮೂಲವನ್ನು ಪತ್ತೆಹಚ್ಚಿ, ನೀರಿನ ಗುಣಮಟ್ಟದ ಸಮಗ್ರ ಪರಿಶೀಲನೆ ನಡೆಸಿ, ಸಾರ್ವಜನಿಕರಿಗೆ ಸುರಕ್ಷಿತ ಕುಡಿಯುವ ನೀರು ಪೂರೈಸುವಂತೆ ಕ್ರಮ ಕೈಗೊಳ್ಳಬೇಕು. ಅಸ್ವಸ್ಥಗೊಂಡಿರುವ ನಾಗರಿಕರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಿ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.
ಇದೇ ರೀತಿಯ ಸಮಸ್ಯೆಗಳು ಉಳ್ಳಾಲ ಭಾಗದಲ್ಲಿಯೂ ಕಂಡುಬರುವ ಸಾಧ್ಯತೆ ಇರುವುದರಿಂದ, ಉಳ್ಳಾಲ, ನಗರ, ಸೋಮೇಶ್ವರ, ಕೋಟೆಕಾರು, ಪಟ್ಟಣ ಪಂಚಾಯತ್ ಹಾಗೂ ವೈದ್ಯಕೀಯ ಅಧಿಕಾರಿಗಳು ಮಳೆಗಾಲದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷತೆಯ ಕುರಿತು ತುರ್ತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು.
ಜನರ ಆರೋಗ್ಯ ಮತ್ತು ಜೀವದ ಪ್ರಶ್ನೆ ಎದುರಾಗಿರುವ ಈ ಸಂದರ್ಭದಲ್ಲಿ ಆಡಳಿತ ಯಂತ್ರ ಜಾಗೃತವಾಗಿರಬೇಕಾಗಿದೆ. ಜನರ ಧ್ವನಿಯಾಗಿ ಮುಂಚಿತವಾಗಿ ಎಚ್ಚರಿಕೆ ನೀಡಿದ್ದ ಉಳ್ಳಾಲವಾಣಿ ವರದಿ ಇಂದು ಮತ್ತೊಮ್ಮೆ ಪ್ರಸ್ತುತವಾಗಿದ್ದು, ಜನರ ಆರೋಗ್ಯದ ವಿಷಯದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರದೆ ತುರ್ತು ಕ್ರಮ ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

