ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಅಖಿಲ ಭಾರತ ಕ್ರೈಸ್ತ ಒಕ್ಕೂಟ (AICU) ಕರ್ನಾಟಕ ರಾಜ್ಯಾಧ್ಯಕ್ಷ ಅನ್ ಡಿಸೋಜ ಪಾನೀರ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಇಂದು ಜುಲಾಯ್ 9ರಂದು ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಯೇಸು ಕ್ರಿಸ್ತರು ಕೇವಲ ಚರ್ಚ್ ಗೋಡೆಗಳಲ್ಲಿ ಮಾತ್ರವಲ್ಲ; ಜನರ ಹೃದಯಗಳಲ್ಲಿ ಅವರ ಸೇವೆಯಲ್ಲಿ ಹಾಗೂ ಕರ್ತವ್ಯಗಳಲ್ಲಿ ಸದಾ ಜೀವಂತವಾಗಿದ್ದಾರೆ. ಶಿಲುಬೆಯನ್ನು ಧ್ವಂಸಗೊಳಿಸುವ ಮೂಲಕ ನಂಬಿಕೆಯನ್ನು ನಾಶಪಡಿಸಲು ಸಾಧ್ಯವಿಲ್ಲ “ಎಂದು ಹೇಳಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಇಂತಹ ಕೃತ್ಯಗಳು ಸಮಾಜದಲ್ಲಿ ಅಶಾಂತಿ, ದ್ವೇಷ ಮತ್ತು ವೈಮನಸ್ಸನ್ನು ಹರಡುವ ದುರುದ್ದೇಶಪೂರಿತ ಪ್ರಯತ್ನಗಳಾಗಿವೆ. ಶಾಂತಿ ಮತ್ತು ಸೌಹಾರ್ದತೆಯನ್ನು ಬಯಸುವ ಯಾವುದೇ ನಾಗರಿಕ ಸಮಾಜದಲ್ಲಿ ಇಂತಹ ಕೃತ್ಯಗಳಿಗೆ ಸ್ಥಾನವಿಲ್ಲ ಎಂದು ಅವರು ತಿಳಿಸಿದ್ದಾರೆ.
ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಎಂದು ಸಂಬಂಧಪಟ್ಟ ಪೊಲೀಸ್ ಇಲಾಖೆಯನ್ನು ಅವರು ಒತ್ತಾಯಿಸಿದ್ದಾರೆ. ಇದೇ ವೇಳೆ, ಅಲ್ಪಸಂಖ್ಯಾತ ಸಮುದಾಯಗಳ ಧಾರ್ಮಿಕ ಸ್ವಾತಂತ್ರ್ಯ ಹಾಗೂ ಅವರ ಪೂಜಾ ಸ್ಥಳಗಳ ಸುರಕ್ಷತೆಯನ್ನು ಸರ್ಕಾರ ಖಚಿತಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಖಿಲ ಭಾರತ ಕ್ರೈಸ್ತ ಒಕ್ಕೂಟದ ಕರ್ನಾಟಕ ರಾಜ್ಯ ಘಟಕವು ಧಾರ್ಮಿಕ ದ್ವೇಷ ಹಿಂಸಾಚಾರ ಹಾಗೂ ಪೂಜಾ ಸ್ಥಳಗಳ ಮೇಲಿನ ದಾಳಿಗಳನ್ನು ತೀವ್ರವಾಗಿ ಖಂಡಿಸುತ್ತದೆ. ದೇಶದ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯವಾಗಿದ್ದು ಇಂತಹ ಘಟನೆಗಳು ಮರುಕಳಿಸದಂತೆ ಪರಿಣಾಮಕಾರಿ ಮತ್ತು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಲ್ವಿನ್ ಡಿಸೋಜ ಪಾನೀರ್ ಅವರು ಮನವಿ ಮಾಡಿದ್ದಾರೆ.

