Site icon Ullalavani

ಖಾಸಗಿ ಬಸ್ ವ್ಯವಸ್ಥೆಯನ್ನು ಅನಗತ್ಯವಾಗಿ ಗುರಿಯಾಗಿಸಬೇಡಿ: ಉಸ್ಮಾನ್ ಅಲ್ತಾಫ್

ಮಂಗಳೂರು, ಆ.4: ಇತ್ತೀಚಿನ ಕೆಲವು ಅಪಘಾತಗಳ ಹಿನ್ನೆಲೆಯಲ್ಲಿ ಅವಳಿ ಜಿಲ್ಲೆಗಳ ಖಾಸಗಿ ಬಸ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬ್ಯಾನ್ ಮಾಡಬೇಕು ಎಂಬ ಬೇಡಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹೊರತು ಇಡೀ ಖಾಸಗಿ ಬಸ್ ವ್ಯವಸ್ಥೆಯನ್ನು ಗುರಿಯಾಗಿಸಬಾರದು ಎಂದು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘದ ಅಧ್ಯಕ್ಷ ಉಸ್ಮಾನ್ ಅಲ್ತಾಫ್ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಖಾಸಗಿ ಬಸ್ ವ್ಯವಸ್ಥೆಗೆ ಸುಮಾರು 100 ವರ್ಷಗಳ ಇತಿಹಾಸವಿದ್ದು, ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು, ಕಾರ್ಮಿಕರು, ಉದ್ಯೋಗಿಗಳು, ವ್ಯಾಪಾರಿಗಳು ಹಾಗೂ ಗ್ರಾಮೀಣ ಪ್ರದೇಶದ ಜನರು ಈ ಸೇವೆಯನ್ನು ಅವಲಂಬಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇಂದಿನ ರಸ್ತೆ ದಟ್ಟಣೆ, ವಾಹನಗಳ ಸಂಖ್ಯೆಯ ಹೆಚ್ಚಳ, ಸ್ಮಾರ್ಟ್ ಸಿಟಿ ಕಾಮಗಾರಿಗಳು, ರಸ್ತೆ ಅಗೆತ ಹಾಗೂ ಟ್ರಾಫಿಕ್ ಸಮಸ್ಯೆಗಳ ನಡುವೆಯೂ ಚಾಲಕರು, ನಿರ್ವಾಹಕರು ಮತ್ತು ಇತರ ಸಿಬ್ಬಂದಿ ಸಮಯ ಪಾಲಿಸಿಕೊಂಡು ಸಾರ್ವಜನಿಕರಿಗೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಸ್ ಮಾಲಕರು ವಾಹನಗಳ ನಿರ್ವಹಣೆ, ಸಿಬ್ಬಂದಿಯ ವೇತನ, ತೆರಿಗೆ, ವಿಮೆ ಹಾಗೂ ಇಂಧನ ವೆಚ್ಚ ಸೇರಿದಂತೆ ಹಲವು ಆರ್ಥಿಕ ಸವಾಲುಗಳ ನಡುವೆಯೂ ಸಾರ್ವಜನಿಕ ಸೇವೆಯನ್ನು ಮುಂದುವರಿಸುತ್ತಿದ್ದು, ಖಾಸಗಿ ಬಸ್ ವ್ಯವಸ್ಥೆ ಸಾವಿರಾರು ಕುಟುಂಬಗಳ ಜೀವನಾಧಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚಿನ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳ ದುಃಖದಲ್ಲಿ ತಾವೂ ಭಾಗಿಯಾಗಿದ್ದು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಅಪಘಾತಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಆದರೆ ಒಂದು ಅಥವಾ ಕೆಲವು ಘಟನೆಗಳನ್ನು ಆಧರಿಸಿ ಇಡೀ ಖಾಸಗಿ ಬಸ್ ವ್ಯವಸ್ಥೆಯನ್ನು ದೂಷಿಸುವುದು ಅಥವಾ ಬ್ಯಾನ್ ಮಾಡುವಂತೆ ಆಗ್ರಹಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.

ಸುರಕ್ಷಿತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ನಿರ್ಮಾಣಕ್ಕೆ ಸಾರಿಗೆ ಇಲಾಖೆ, ಬಸ್ ಮಾಲಕರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಎಲ್ಲರೂ ಕೈಜೋಡಿಸಬೇಕು. ಟೀಕೆಗಿಂತ ಸುರಕ್ಷತೆ ಮತ್ತು ಸೇವೆಯ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಉಸ್ಮಾನ್ ಅಲ್ತಾಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version