Site icon Ullalavani

ಪುತ್ತೂರು ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಮತ್ತೆ ವಿವಾದ: 30 ಕೋಟಿ ರೂ. ಮೌಲ್ಯದ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಭಕ್ತರ ವಿರೋಧ, ಶಾಸಕರ ನಡೆಗೆ ಆಕ್ರೋಶ

ಮಂಗಳೂರು, ಆ. 6: ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಇದೀಗ ಮತ್ತೊಂದು ಹೊಸ ವಿವಾದ ತಲೆದೋರಿದೆ. ದೇವಸ್ಥಾನಕ್ಕೆ ಸೇರಿದ ಅಂದಾಜು 30 ಕೋಟಿ ರೂಪಾಯಿ ಮೌಲ್ಯದ 3 ಎಕರೆ ಜಾಗದಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಮುಂದಾಗಿರುವುದು ಭಕ್ತರ ಹಾಗೂ ಆಡಳಿತ ಮಂಡಳಿಯ ನಡುವೆ ಪರ-ವಿರೋಧದ ತೀವ್ರ ಚರ್ಚೆಗೆ ಕಾರಣವಾಗಿದೆ.

ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಕ್ಷೇತ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಆದರೆ, ಈ ಯೋಜನೆಯ ಭಾಗವಾಗಿ ವರ್ಷಗಳ ಇತಿಹಾಸ ಹೊಂದಿದ್ದ ‘ನಟರಾಜ ವೇದಿಕೆ’ಯನ್ನು ನೆಲಸಮಗೊಳಿಸಿ, ಅದೇ ಜಾಗದಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ತೀರ್ಮಾನಿಸಿರುವುದು ಭಕ್ತರ ಕೆಂಗಣ್ಣಿಗೆ ಗುರಿಯಾಗಿದೆ.

ಧಾರ್ಮಿಕ ದತ್ತಿ (ಮುಜರಾಯಿ) ವ್ಯಾಪ್ತಿಗೆ ಬರುವ ದೇವಸ್ಥಾನಗಳಲ್ಲಿ ಯಾವುದೇ ಕಾಮಗಾರಿ ನಡೆಸಬೇಕಿದ್ದರೂ ಅಧಿಕೃತ ಟೆಂಡರ್ ಪ್ರಕ್ರಿಯೆ ನಡೆಯಬೇಕು. ಆದರೆ, ಇಲ್ಲಿ ಯಾವುದೇ ಟೆಂಡರ್ ಕರೆಯದೆ ಏಕಾಧಿಪತ್ಯದ ರೀತಿಯಲ್ಲಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಭಕ್ತರು ಗಂಭೀರ ಆರೋಪ ಮಾಡಿದ್ದಾರೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಜಾಗದಲ್ಲಿ ರಸ್ತೆ ನಿರ್ಮಿಸುವ ಬದಲು ಪರ್ಯಾಯ ರಸ್ತೆ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಭಕ್ತರ ವಿರೋಧ ಹಾಗೂ ಆರೋಪಗಳಿಗೆ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ತಿರುಗೇಟು ನೀಡಿದ್ದಾರೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಸದ್ಯ ಇರುವ ರಸ್ತೆಯಲ್ಲಿ ತೀವ್ರ ವಾಹನ ದಟ್ಟಣೆ ಉಂಟಾಗುತ್ತಿರುವುದರಿಂದ ಅಗಲವಾದ ರಸ್ತೆಯ ನಿರ್ಮಾಣ ಅತ್ಯಂತ ಅನಿವಾರ್ಯವಾಗಿದೆ.

ಕ್ಷೇತ್ರಕ್ಕೆ ಬರುವ ಭಕ್ತರ ಹಿತದೃಷ್ಟಿ ಹಾಗೂ ಸುರಕ್ಷತೆಯನ್ನು ಮನಸ್ಸಿನಲ್ಲಿಟ್ಟುಕೊಂಡು ಈ ರಸ್ತೆ ಅಭಿವೃದ್ಧಿ ನಿರ್ಧಾರ ಕೈಗೊಳ್ಳಲಾಗಿದೆ. ಸಾರ್ವಜನಿಕರು ಹಾಗೂ ಭಕ್ತರು ಈ ಯೋಜನೆಗೆ ಸಹಕರಿಸಬೇಕೆಂದು ಸಮಿತಿ ಮನವಿ ಮಾಡಿದೆ.

Exit mobile version