ಕೊಳ್ನಾಡು: ರಾಷ್ಟ್ರೀಯ ಪೋಷಣ್ ಮಾಸಾಚರಣೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ, ಶಿಶು ಅಭಿವೃದ್ಧಿ ಯೋಜನೆ ವಿಟ್ಲ, ಕೊಳ್ನಾಡು ಗ್ರಾಮ ಪಂಚಾಯತ್, ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮೀಣ ಆರೋಗ್ಯ ಸೇವೆ ಮತ್ತು ಅಭಿವೃದ್ಧಿ ಕೇಂದ್ರ ಹಾಗೂ ಯೆನೆಪೊಯ ಮೆಡಿಕಲ್ ಕಾಲೇಜು (ಡೀಮ್ಡ್ ಟು ಬಿ ಯೂನಿವರ್ಸಿಟಿ), ದೇರಳಕಟ್ಟೆ ಇವರ ಸಹಯೋಗದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಾಗೂ ಪೌಷ್ಟಿಕಾಂಶ ಅರಿವು ಕಾರ್ಯಕ್ರಮ ಗುರುವಾರ ಕೊಳ್ನಾಡು ಪಂಚಾಯತ್ನ ಸೌಹಾರ್ದ ಸಭಾಂಗಣದಲ್ಲಿ ನಡೆಯಿತು.

ಸಾಲೆತ್ತೂರು ಮೈದಾನದ ಸಮೀಪದ ಸೌಹಾರ್ದ ಸಭಾಂಗಣದಲ್ಲಿ ಬೆಳಗ್ಗೆಯಿಂದ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು. ಬಳಿಕ ನಡೆದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಯೆನೆಪೊಯ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು ಮತ್ತು ಆಸ್ಪತ್ರೆಯ ಪೌಷ್ಟಿಕಾಂಶ ಮತ್ತು ಆಹಾರಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಹಾಗೂ ಆಹಾರ ತಜ್ಞರಾದ ಡಾ. ಅಜಿತ್ ಕೆ. ಅವರು ಪೌಷ್ಟಿಕ ಆಹಾರ, ಸಮತೋಲನ ಆಹಾರ, ಮಹಿಳೆಯರು ಮತ್ತು ಮಕ್ಕಳ ಪೌಷ್ಠಿಕತೆ ಹಾಗೂ ಪೌಷ್ಠಿಕಾಂಶ ಕೊರತೆ ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.

ಸ್ಥಳೀಯವಾಗಿ ಲಭ್ಯವಿರುವ ಸಿರಿಧಾನ್ಯಗಳು, ಬೇಳೆಕಾಳುಗಳು, ಹಸಿರು ಸೊಪ್ಪು, ತರಕಾರಿಗಳು, ಹಣ್ಣುಗಳು ಹಾಗೂ ವಿವಿಧ ಬೀಜಗಳನ್ನು ಒಳಗೊಂಡ ವೈವಿಧ್ಯಮಯ ಆಹಾರವನ್ನು ನಿಯಮಿತವಾಗಿ ಸೇವಿಸುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಯೆನೆಪೊಯ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನ III BNYS ವಿದ್ಯಾರ್ಥಿಗಳು ಭಾಗವಹಿಸಿ ಸಾರ್ವಜನಿಕರಲ್ಲಿ ಪೌಷ್ಠಿಕ ಆಹಾರ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಅರಿವು ಮೂಡಿಸಿದರು.

