ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು: ರಾ. ಹೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಉಳ್ಳಾಲ ನಗರಸಭೆ ಪೌರಾಯುಕ್ತೆ ರೂಪಾ ಟಿ ಶೆಟ್ಟಿ ಅವರು ತೊಕ್ಕೊಟ್ಟು ಕೇಂದ್ರ ಬಸ್ಸು ನಿಲ್ದಾಣದ ಬಳಿ ಇರುವ ಅನಧಿಕೃತ ಗೂಡಂಗಡಿಗಳನ್ನು ಪೌರ ಕಾರ್ಮಿಕರ ಮುಖೇನ ತೆರವುಗೊಳಿಸಿದರು. ಅಂಗಡಿ ಮಾಲೀಕರ ತೀವ್ರ ವಿರೋಧದ ನಡುವೆಯೂ ಪೋಲೀಸರ ಮಧ್ಯಸ್ಥಿಕೆಯಲ್ಲಿ ತೆರವು ಕಾರ್ಯಾಚರಣೆ ನಡೆಯಿತು.
ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿಯಲ್ಲಿರುವ ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸುವಂತೆ ಅಂಗಡಿ ಮಾಲೀಕರಿಗೆ ಉಳ್ಳಾಲ ನಗರಸಭೆಯು ಧ್ವನಿವರ್ಧಕದ ಮೂಲಕ ಸೂಚನೆ ನೀಡಿತ್ತಾದರೂ ಅಂಗಡಿಗಳು ತೆರವುಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ನಗರಸಭಾ ಪೌರಾಯುಕ್ತೆ ರೂಪಾ ಟಿ ಶೆಟ್ಟಿ ಅವರು ಗುರುವಾರದಂದು ಸಿಬ್ಬಂದಿ ಮತ್ತು ಪೌರಾಯುಕ್ತರ ಸಹಕಾರದಿಂದ ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸಿದ್ದಾರೆ. ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಗೂಡಂಗಡಿ ಮಾಲೀಕರು ಅಂಗಡಿಗಳಲ್ಲಿ ಸಾಮಾನು ಇದ್ದು ಈಗ ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದಾಗ ಪೋಲೀಸರು ಮಧ್ಯ ಪ್ರವೇಶಿಸಿದರು .ಈ ವೇಳೆ ಪೋಲೀಸರ ಜತೆಯೂ ವರ್ತಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ನಡೆಯಿತು.
ಪೌರಾಯುಕ್ತೆ ರೂಪಾ ಟಿ ಶೆಟ್ಟಿ ಪ್ರತಿಕ್ರಿಯಿಸಿ ಅನಧಿಕೃತ ಗೂಡಂಗಡಿಗಳಿಂದಾಗಿ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ತೊಡಕುಂಟಾಗಿತ್ತು. ಈ ಹಿನ್ನೆಲೆಯಲ್ಲಿ ಅಂಗಡಿಗಳನ್ನು ತೆರವುಗೊಳಿಸುವಂತೆ ಒಂದು ವಾರದ ಕಾಲಾವಕಾಶ ನೀಡಲಾಗಿತ್ತು. ಇದಕ್ಕೆ ಯಾರೂ ಸ್ಪಂಧಿಸದ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಬೀದಿ ಬದಿ ವ್ಯಾಪಾರಸ್ಥರಿಗೆ ಈಗಾಗಲೇ ನಗರಸಭೆಯಿಂದ ಗುರುತಿನ ಚೀಟಿಗಳನ್ನು ವಿತರಿಸಲಾಗಿದ್ದು ,ಮುಂದಿನ ದಿನಗಳಲ್ಲಿ ಅವರ ವ್ಯಾಪಾರಕ್ಕೆ ಸುಸಜ್ಜಿತ ಸ್ಥಳವನ್ನು ನೀಡುವುದಾಗಿ ಭರವಸೆ ನೀಡಿದರು.



