Site icon Ullalavani

ವಿರೋಧ ಪಕ್ಷಗಳ ಆರೋಪ ಸ್ವಾಭಾವಿಕ: ಸಚಿವ ಯು.ಟಿ.ಖಾದರ್

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೊಣಾಜೆ: ಕಾಂಗ್ರೆಸ್‍ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿರುವ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರ ಕಾರ್ಯ ವೈಖರಿ ಬಗ್ಗೆ ನಿಗಾ ಇಡಲಾಗಿದೆ. ಚುನಾವಣೆ ದಿನ ಎಲ್ಲರೂ ಒಗ್ಗಟ್ಟಿನಿಂದ ಪ್ರತಾಪ್ ಚಂದ್ರ ಶೆಟ್ಟಿ ಅವರಿಗೆ ಮತ ಹಾಕುವ ಮೂಲಕ ಕುರ್ನಾಡು ಮತ್ತು ಉಳ್ಳಾಲ ಬ್ಲಾಕ್‍ನಲ್ಲಿ ಅತ್ಯಧಿಕ ಮತಗಳಿಂದ ಜಯಗಳಿಸುವಂತೆ ನೋಡಿಕೊಳ್ಳಬೇಕು. ಚುನಾವಣೆ ಸಂದರ್ಭ ವಿರೋಧ ಪಕ್ಷದಿಂದ ಆರೋಪ ಸ್ವಾಭಾವಿಕವಾಗಿದ್ದು ಬಿಜೆಪಿ ಮಾಡುತ್ತಿರುವ ಆರೋಪಗಳ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬೇಡಿ ಎಂದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.

ಕುರ್ನಾಡು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮಂಗಳವಾರ ಮುಡಿಪು ಖಾಸಗಿ ಸಭಾಂಗಣದಲ್ಲಿ ನಡೆದ ಸ್ಥಳಿಯಾಡಳಿತ ಜನಪ್ರತಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಜನಪ್ರತಿನಿಧಿಗಳು ಪಕ್ಷದ ಅಧಿಕೃತ ಅಭ್ಯರ್ಥಿಗೆ ಮತ ನೀಡದೆ ಅಡ್ಡ ಮತದಾನ ಮಾಡಿದರೆ ಅವರ ವಿರುದ್ಧ ಯಾವುದೇ ಕರುಣೆ ಇಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ವಿಧಾನಸಭೆ ಚುನಾವಣೆ ಸಂದರ್ಭ ಕಾಂಗ್ರೆಸ್‍ನಿಂದ 107 ಭರವಸೆಗಳನ್ನು ನೀಡಲಾಗಿದ್ದು ಈಗಾಗಲೇ 102 ಭರವಸೆಗಳನ್ನು ಈಡೇರಿಸಲಾಗಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಮುಖಂದರು, ಕಾರ್ಯಕರ್ತರು, ಜನಪ್ರತಿನಿಧಿಗಳ ಅಭಿಲಾಷೆ ಮೇರೆಗೆ ಪ್ರತಾಪ್ ಚಂದ್ರ ಶೆಟ್ಟಿಯವರನ್ನು ಮತ್ತೆ ಕಣಕ್ಕಿಳಿಸಲಾಗಿದೆ ಎಂದು ತಿಳಿಸಿದರು.

ಇದುವರೆಗಿನ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಹಕ್ಕು, ಸಮಸ್ಯೆಗಳ ಬಗ್ಗೆ ವಿಧಾಪರಿಷತ್‍ನಲ್ಲಿ ಧ್ವನಿ ಎತ್ತುವ ಮೂಲಕ ಸರ್ಕಾರದ ಗಮನಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈ ಬಾರಿ ಗೆದ್ದಲ್ಲಿ ಮತದಾರರು ಇಟ್ಟಿರುವ ನಂಬಿಕೆ, ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸುವುದಾಗಿ ಅಭ್ಯರ್ಥಿ ಪ್ರತಾಪ್‍ಚಂದ್ರ ಶೆಟ್ಟಿ ಹೇಳಿದರು.

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಮೂಡಾ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ, ಮಾಜಿ ಶಾಸಕ ಯು.ಆರ್.ಸಭಾಪತಿ, ಮಾಜಿ ಮೂಡಾ ಅಧ್ಯಕ್ಷ ಸುರೇಶ್ ಬಳ್ಳಾಲ್, ಎಪಿಎಂಸಿ ಸದಸ್ಯ ಉಮರ್ ಪಜೀರ್, ಎಸ್‍ಸಿ-ಎಸ್‍ಟಿ ಘಟಕದ ಅಧ್ಯಕ್ಷ ಪದ್ಮನಾಭ ನರಿಂಗಾನ, ಯುವ ಕಾಂಗ್ರೆಸ್ ಅಧ್ಯಕ್ಷ ನಝರ್ ಕೊಣಾಜೆ,ನಾಸೀರ್ ನಡುಪದವು, ಕ್ಷೇತ್ರ ಯುವಕಾಂಗ್ರೆಸ್ ಕಾರ್ಯದರ್ಶಿ ಸಮೀರ್ ಪಜೀರ್ ಮೊದಲಾದವರು ಉಪಸ್ಥಿತರಿದ್ದರು.

ಕುರ್ನಾಡ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಲೀಲ್ ಮೊಂಟೆಪದವು ಕಾರ್ಯಕ್ರಮ ನಿರೂಪಿಸಿದರು.

`ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯ ಅಧಿಸೂಚನೆ ಜ.8 ಹೊರಡಿಸಲಿದ್ದು ಮೆಲ್ದರ್ಜೆಗೇರಿರುವ ಪಟ್ಟಣ ಪಂಚಾಯಿತಿಗಳಿಗೂ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಲಾಗುವುದು. ಸೋಮೇಶ್ವರ ಗ್ರಾಮ ಪಂಚಾಯಿತಿ ಮೇಲ್ದರ್ಜೆಗೇರಿಸುವ ಸಂಬಂಧ ಜಿಲ್ಲಾಡಳಿತದಿಂದ ಯಾವುದೇ ಮನವಿ ಬಂದಿರಲಿಲ್ಲ’
ವಿನಯಕುಮಾರ್ ಸೊರಕೆ, ನಗರಾಭಿವೃದ್ಧಿ ಸಚಿವ

Exit mobile version