Site icon Ullalavani

ಕುಂಪಲ: ಗ್ರಾಮೀಣ ಕ್ರೀಡೋತ್ಸವ ಮತ್ತು ಆಟಿದ ಗಮ್ಮತ್

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಜಿಲ್ಲೆಯ ಸಂಸ್ಕøತಿಯನ್ನು ಉಳಿಸಲು ಹಾಗೂ ಬೆಳೆಸಲು ಆಟಿದ ಗಮ್ಮತ್ ಕಾರ್ಯಕ್ರಮಗಳು ಸಹಕಾರಿಯಾಗಿದ್ದು, ವಿದೇಶಿಯರು ತುಳುನಾಡಿನ ಕಲೆಯನ್ನು ಮೆಚ್ಚಿ ಅದರ ಕುರಿತು ಅಧ್ಯಯನ ನಡೆಸುವುದರಿಂದ ಕಲೆಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯ ಇದೆ ಎಂದು ಜಿಲ್ಲಾ ಪಂಚಾಯತ್‍ನ ಉಪ ಕಾರ್ಯದರ್ಶಿ ಎನ. ಆರ್. ಉಮೇಶ್ ಅಭಿಪ್ರಾಯಪಟ್ಟರು.

ಅವರು ಕುಂಪಲ ಶ್ರೀ ಬಾಲಕೃಷ್ಣ ಮಂದಿರ, ಶ್ರೀ ಬಾಲಕೃಷ್ಣ ಮಹಿಳಾ ಸೇವಾ ಸಮಿತಿ ಇದರ ಆಶ್ರಯದಲ್ಲಿ ನಡೆದ ಗ್ರಾಮೀಣ ಕ್ರೀಡೋತ್ಸವ ಮತ್ತು `ಆಟಿದ ಗಮ್ಮತ್ ‘ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇರುವಂತಹ ಸಂಸ್ಕøತಿ ಬೇರೆಲ್ಲೂ ಇಲ್ಲ. ಆದರೆ ಸದ್ಯ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಸಂಸ್ಕøತಿ ಉಳಿದಿದೆ. ಇದನ್ನು ಎಲ್ಲಾ ಭಾಗದ ಮಕ್ಕಳಿಗೆ ತಿಳಿಸುವ ಪ್ರಯತ್ನ ಮಾಡುವುದರಿಂದ ಕಲೆಗಳನ್ನು ನಡೆಸಿಕೊಂಡು ಹೋಗುವ ಚಿಂತನೆ ಎಲ್ಲರೂ ಮಾಡಬೇಕಿದೆ. ಗ್ರಾಮದಲ್ಲಿ ನಡೆಯುವ ಕಾರ್ಯಕ್ರಮಗಳು ಶಾಂತಿಯನ್ನು ಕಾಪಾಡುವುದರಿಂದ ಎಲ್ಲೆಡೆ ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಇದೆ ಎಂದರು.

ಕಿಂಡಿ ಅಣೆಕಟ್ಟಿಗೆ ಒತ್ತು: ಜಿಲ್ಲೆಯಲ್ಲಿ 400 ಸೆಂಟಿಮೀಟರ್ ಸುರಿಯುತ್ತಿದ್ದ ಮಳೆ ಪ್ರಸಕ್ತ ವರ್ಷದಲ್ಲಿ ಕ್ಷೀಣಿಸಿದೆ. ನಗರಪ್ರದೇಶದಲ್ಲಿನ ಕಾಂಕ್ರೀಟಿಕರಣ ಹಾಗೂ ಪರಿಸರ ನಾಶ ಮಳೆ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಸಣ್ಣ ತೊರೆಗಳಲ್ಲಿ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ ಅಂತರ್ಜಲ ಹೆಚ್ಚಿಸುವ ಕುರಿತು ಚಿಂತನೆ ನಡೆಸಿದೆ. ರಾಜ್ಯದಾದ್ಯಂತ 2,60,000 ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಹಾಗೂ ಯುವಜನಾಂಗದವರಿಗೆ ಯೋಗದ ಕುರಿತು ಅರಿವು ಮೂಡಿಸುವ ಮೂಲಕ ಜಿಲ್ಲಾ ಪಂಚಾಯಿತಿ ಆರೋಗ್ಯವನ್ನು ಕಾಪಾಡಲು ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಕೌನ್ಸಿಲರ್ ಲಕ್ಷ್ಮಣ ಅಬ್ಬಕ್ಕ ನಗರ ವಹಿಸಿದ್ದರು. ಬೋಳಿಯಾರ್ ಗ್ರಾಮ ಪಂಚಾಯತ್‍ನ ಅಧ್ಯಕ್ಷ ಸತೀಶ್ ಆಚಾರ್ಯ, ಕರ್ಣಾಟಕ ಬ್ಯಾಂಕಿನ ಪ್ರಬಂಧಕ ಸಂದೀಪ್, ಶ್ರೀ ಬಾಲಕೃಷ್ಣ ಮಂದಿರ ಕುಂಪಲದ ಗೌರವಾಧ್ಯಕ್ಷ ಕೇಶವದಾಸ್ ಬಗಂಬಿಲ, ಕುಂಪಲ ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಬಿ.ಜೆ, ಮಹಿಳಾ ಸಮಿತಿ ಅಧ್ಯಕ್ಷೆ ರೇಖಾ ಚಂದ್ರಹಾಸ್, ಕೋಟೆಕಾರು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಅನಿಲ್ ಬಗಂಬಿಲ, ಕೊಣಾಜೆ ಗ್ರಾಮ ಪಂಚಾಯಿತಿ ಸದಸ್ಯೆ ಹಾಗೂ ಹಿರಿಯ ಜಾನಪದ ಕಲಾವಿದೆ ಮುತ್ತಕ್ಕ ಮುಖ್ಯ ಅತಿಥಿಗಳಾಗಿದ್ದರು.

ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಶ್ರೀ ಬಾಲಕೃಷ್ಣ ಮಂದಿರದ ಅಧ್ಯಕ್ಷ ಸತೀಶ್ ಕುಂಪಲ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಪ್ರವೀಣ್ ಎಸ್. ಕುಂಪಲ ಕಾರ್ಯಕ್ರಮ ನಿರ್ವಹಿಸಿದರು. ಸೋಮೇಶ್ವರ ಗ್ರಾಮ ಪಂಚಾಯತ್ ಸದಸ್ಯ ಹರಿಪ್ರಸಾದ್ ಶೆಟ್ಟಿ ವಂದಿಸಿದರು.

ಇದೇ ಸಂದರ್ಭ ಆಷಾಢ ಮಾಸದ ವಿಶಿಷ್ಟ ತಿಂಡಿ-ತಿನಿಸುಗಳು, ಗ್ರಾಮೀಣ ಕ್ರೀಡಾಕೂಟಗಳು ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು.

Exit mobile version